
ಬಳ್ಳಾರಿ: ‘ಬೇಸಿಗೆಯಲ್ಲಿ ಜನ- ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕು’ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿದ ಅವರು, ‘ಬಳ್ಳಾರಿ ತಾಲ್ಲೂಕಿನ 21, ಕಂಪ್ಲಿಯ 16, ಕುರುಗೋಡಿನ 15, ಸಂಡೂರಿನ 3, ಸಿರುಗುಪ್ಪದ 28 ಗ್ರಾಮಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 83 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಗಳಿವೆ. ಈ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಮುಂಜಾಗ್ರತೆ ವಹಿಸಬೇಕು’ ಎಂದು ಸೂಚಿಸಿದರು.
‘ಸರ್ಕಾರಿ ಬೋರ್ವೆಲ್ಗಳನ್ನು ಸುಸ್ಥಿತಿಯಲ್ಲಿಡಬೇಕು. ಖಾಸಗಿ ಬೋರ್ವೆಲ್ಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಹೊಸ ಬೋರ್ವೆಲ್ ಕೊರೆಸಲು ಆದ್ಯತೆ ನೀಡಬೇಕು’ ಎಂದು ತಿಳಿಸಿದರು.
‘ಜಿಲ್ಲೆಯಲ್ಲಿ ಒಟ್ಟು 504 ಆರ್ಒ ಘಟಕಗಳಿದ್ದು, 454 ಕಾರ್ಯನಿರ್ವಹಿಸುತ್ತಿವೆ. ಉಳಿದ 54 ಘಟಕಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು’ ಎಂದು ನಿರ್ದೇಶನ ನೀಡಿದರು.
ಜಾನುವಾರುಗಳಿಗೆ ಮೇವಿನ ದಾಸ್ತಾನು ಇಟ್ಟುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಿಸಿ ಗಾಳಿ ಬಗ್ಗೆ ಜಾಗೃತಿ: ‘ಜಿಲ್ಲೆಯಲ್ಲಿ ಮಾರ್ಚ್ ಅಂತ್ಯದಿಂದ ಮೇ ಅಂತ್ಯದವರೆಗೆ ಬಿಸಿಲಿನ ಪ್ರಖರತೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಬೇಕು’ ಎಂದು ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಮೇವಿನ ಕೊರತೆ ಉಂಟಾದಲ್ಲಿ ದೂರು ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಹಾಯವಾಣಿ ಆರಂಭಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೇರ್, ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಬ್ದುಲ್ ರೆಹಮಾನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಂದುಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.