ಕೊಟ್ಟೂರು: ಗ್ಯಾರಂಟಿ ಈಡೇರಿಕೆಗಾಗಿ ಕಾಂಗ್ರೆಸ್ ಸರ್ಕಾರ ಶ್ರಮಿಸುತ್ತಿದೆಯೇ ವಿನಃ ರಾಜ್ಯದ ಅಭಿವೃದ್ಧಿಗಾಗಿ ಕಿಂಚತ್ತು ಶ್ರಮಿಸುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಚನ್ನಬಸವನಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಏರ್ಪಡಿಸಿದ್ದ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ವಿಶೇಷ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಮಾತನಾಡಿದರು.
ಎಸ್ಟಿ ನಿಗಮದ ₹ 187 ಕೋಟಿ ಮತ್ತು ಮೂಡಾ ಹಗರಣ ಕಾಂಗ್ರೆಸ್ ಸರ್ಕಾರದ ಬಹುದೊಡ್ಡ ಸಾಧನೆಗಳು ಎಂದು ವ್ಯಂಗ್ಯವಾಡಿದರು. ಸರ್ಕಾರದ ಬಗ್ಗೆ ಕಾಂಗ್ರೆಸ್ ಶಾಸಕರೇ ಅಸಮಧಾನಗೊಂಡಿದ್ದಾರೆ ಎಂದರು. ಕೊಟ್ಟೂರು ಹಾಗೂ ಸುತ್ತಮುತ್ತ ಹಳ್ಳಿಗಳು ಬಿಜೆಪಿಯ ಭದ್ರಕೋಟೆಯಾಗಿದ್ದು ಮುಂಬರುವ ಚುನಾವಣೆಗಳಲ್ಲಿ ಪಕ್ಷ ಜಯಗಳಿಸುವ ಮೂಲಕ ಉತ್ತಮ ಸಾಧನೆ ತೋರುತ್ತದೆ ಎಂದರು.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣಿಸಿ ರಾಮಣ್ಣ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಹಗರಣದ ವಿರುದ್ಧ ಮೈಸೂರಿನಲ್ಲಿ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ಹೋರಾಟಕ್ಕೆ ಮುಂದಾಗುತ್ತೇವೆ ಎಂದರು.
ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಭರಮನಗೌಡ ಹಾಗೂ ಪಟ್ಟಣ ಪಂಚಾಯ್ತಿ ಸದಸ್ಯ ಜಿ.ಈಶ್ವರಗೌಡ ಮಾತನಾಡಿದರು. ಮಂಡಲ ಅಧ್ಯಕ್ಷ ಕೆ.ಎಸ್.ಪ್ರಕಾಶ್, ಕಾರ್ಯಕಾರಣಿ ಸದಸ್ಯ ಟಿ.ಸೋಮಶೇಖರ್, ಎಸ್ಸಿ ಮೋರ್ಚ್ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ವಿಷ್ಣು ಹಾಗೂ ಮುಖಂಡರಾದ ಜಯಪ್ರಕಾಶ್ ಅಂಗಡಿ ಪಂಪಾಪತಿ, ರಾಜೇಶ್, ರಾಕೇಶ್, ಚಪ್ಪರದಹಳ್ಳಿ ಕೆ.ಕೊಟ್ರೇಶ್ ಮುಂತಾದವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.