ಬಳ್ಳಾರಿ: ನಗರದ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಐಸೊಲೆಷನ್ ವಾರ್ಡಿಗೆ ಬುಧವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಸೋಂಕಿತರ ಅಹವಾಲುಗಳನ್ನು ಆಲಿಸಿದರು.
ಪಿಪಿಇ ಕಿಟ್ ಧರಿಸಿ ವಿಮ್ಸ್ ನಿರ್ದೇಶಕ ಡಾ.ದೇವಾನಂದ ಅವರೊಂದಿಗೆ ತೆರಳಿದ ಸಚಿವರು ಸೋಂಕಿತರಿಗೆ ಧೈರ್ಯ ತುಂಬಿದರು.
ವಾರ್ಡ್ನಲ್ಲಿಗುಣಮಟ್ಟದ ಊಟ, ಚಿಕಿತ್ಸೆ ಕೊಡಲಾಗುತ್ತಿದೆ ಮತ್ತು ಸ್ವಚ್ಛತೆ ನಿರ್ವಹಣೆಯೂ ಉತ್ತಮವಾಗಿದೆ ಎಂದರು.
ನಂತರ ಸಚಿವರು ಸ್ಥಳದಲ್ಲಿ ಉಪಸ್ಥಿತರಿದ್ದ ಎಲ್ಲ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಇದ್ದರು.
ನಿಯಮಪಾಲಿಸದಿದ್ದರೆ ಸ್ವಯಂಪ್ರೇರಿತ ದೂರು ದಾಖಲಿಸಿ: ಸಚಿವ ಸಿಂಗ್
ಬಳ್ಳಾರಿ: ಸಾರ್ವಜನಿಕ ಸ್ಥಳಗಳಲ್ಲಿ ಸೋಂಕು ನಿಯಂತ್ರಣ ನಿಯಮಗಳನ್ನುಪಾಲಿಸದವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ ಎಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.
ನಗರದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು ಮತ್ತು ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು. ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನ ಸೇರಿದ ಸಂದರ್ಭದಲ್ಲಿ ಈ ನಿಯಮಗಳ ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ ಸೋಂಕಿತ ರ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಕೊರೊನಾ ವಾರಿಯರ್ಸ್ಗಳು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಅವರಿಗೆ ಧೈರ್ಯ ತುಂಬಿರುವೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.