ADVERTISEMENT

ನೂತನ ವಿಜಯನಗರ ಜಿಲ್ಲೆ ಉದ್ಘಾಟನೆ; ಗಣ್ಯರಿಗೆ ಆಹ್ವಾನ

ಗಾಯಕರಾದ ಮಾಂಗ್ಲಿ, ಶಮಿತಾ ಮಲ್ನಾಡ್‌, ವಿಜಯ್‌ ಪ್ರಕಾಶ್‌ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 16:13 IST
Last Updated 28 ಸೆಪ್ಟೆಂಬರ್ 2021, 16:13 IST
ಸಚಿವ ಆನಂದ್‌ ಸಿಂಗ್‌ ಅವರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಕ್ಟೋಬರ್‌ 2ರಂದು ನಡೆಯಲಿರುವ ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಿದರು
ಸಚಿವ ಆನಂದ್‌ ಸಿಂಗ್‌ ಅವರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಕ್ಟೋಬರ್‌ 2ರಂದು ನಡೆಯಲಿರುವ ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಿದರು   

ಹೊಸಪೇಟೆ (ವಿಜಯನಗರ): ಅಕ್ಟೋಬರ್‌ 2ರಂದು ನಡೆಯಲಿರುವ ನೂತನ ವಿಜಯನಗರ ಜಿಲ್ಲೆಯ ಉದ್ಘಾಟನಾ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮಂಗಳವಾರ ಬೆಂಗಳೂರಿನಲ್ಲಿ ಹಲವು ಗಣ್ಯರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಬಿ.ಎಸ್‌. ಯಡಿಯೂರಪ್ಪ, ಸಚಿವರಾದ ಗೋವಿಂದ ಎಂ. ಕಾರಜೋಳ, ಕೆ.ಎಸ್‌. ಈಶ್ವರಪ್ಪ, ಡಾ.ಸಿ.ಎನ್‌. ಅಶ್ವತ್ಥನಾರಾಯಣ, ಎಸ್‌.ಟಿ. ಸೋಮಶೇಖರ್‌, ಡಾ. ಸುಧಾಕರ್‌, ಗೋಪಾಲಯ್ಯ, ವಿ. ಸೋಮಣ್ಣ, ಶಾಸಕ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ಕೊಟ್ಟರು.

ಅಕ್ಟೋಬರ್‌ 2ರಂದು ಸಂಜೆ 4ಕ್ಕೆ ವಡಕರಾಯ ದೇವಸ್ಥಾನದಿಂದ ನಗರದ ಕ್ರೀಡಾಂಗಣದ ವರೆಗೆ ವಿಜಯನಗರ ವೈಭವ ಮೆರವಣಿಗೆ ನಡೆಯಲಿದೆ. ಸಂಜೆ 6ಕ್ಕೆ ವಿದ್ಯಾರಣ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ವಿವಿಧ ಮಠಗಳ ಮಠಾಧೀಶರು ಪಾಲ್ಗೊಳ್ಳುವರು.

ADVERTISEMENT

ಅಕ್ಟೋಬರ್‌ 3ರಂದು ಸಂಜೆ 6ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಸಮಾರೋಪ ಭಾಷಣ ಮಾಡುವರು. ರಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಬಳಿಕ ಲಕ್ಷ್ಮಿ ದುಬೆ ಮತ್ತು ತಂಡದವರು ದೇಶಭಕ್ತಿ, ಆಶುಗೀತೆ, ಮಂಜುಳಾ ಪರಮೇಶ್‌ ಮತ್ತು ತಂಡ ನೃತ್ಯರೂಪಕ, ಗಾಯಕರಾದ ಮಾಂಗ್ಲಿ, ಅನುರಾಧಾ ಭಟ್‌, ಶಮಿತಾ ಮಲ್ನಾಡ್‌, ವಿಜಯ್‌ ಪ್ರಕಾಶ್‌ ಮತ್ತು ತಂಡದವರು ಚಲನಚಿತ್ರ ಗೀತೆ ಹಾಡುವರು. ಬಳಿಕ ಸಿಡಿಮದ್ದು ಸುಡುವ ಕಾರ್ಯಕ್ರಮ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.