
ಕೂಡ್ಲಿಗಿ: ತಾಲ್ಲೂಕಿನ ಗುಡೇಕೋಟೆಯಲ್ಲಿ ಜ. 31 ರಂದು ಹಾಗೂ ಫೆ. 1 ರಂದು ನಡೆಯಲಿರುವ ಒನಕೆ ಓಬವ್ವ ಉತ್ಸವಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ವಿ.ಕೆ. ನೇತ್ರಾವತಿ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮ ನಡೆಸಲು ಮೊಳಕಾಲ್ಮುರು ರಸ್ತೆಯ ಪಕ್ಕದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದ್ದು, 10 ಸಾವಿರ ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯ ಮುಂಭಾಗದಲ್ಲಿ 2ರಿಂದ 3 ಸಾವಿರ ಗಣ್ಯರು ಕುಳಿತುಕೊಳ್ಳಲು ಸ್ಥಳಾವಕಾಶ ಮಾಡಲಾಗಿದೆ. ಮಾಧ್ಯಮದವರಿಗೆ ಪ್ರತ್ಯೇಕ ಆಸನ ಸೇರಿದಂತೆ ಮಾಧ್ಯಮ ಕೇಂದ್ರವನ್ನು ತೆರೆಯಲಾಗಿದ್ದು, ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಕಾರ್ಯಕ್ರಮ ನಡೆಸಲಾಗುವುದು’ ಎಂದು ಮಾಹಿತಿ ನೀಡಿದರು.
‘ಗ್ರಾಮದಲ್ಲಿ ಸ್ವಚ್ಛತೆ ಕೈಗೊಳ್ಳಲಾಗಿದ್ದು, ಮೆರವಣಿಗೆಯ ಸಂದರ್ಭದಲ್ಲಿ ದೂಳು ಬಾರದಂತೆ ರಸ್ತೆಗೆ ನೀರು ಬಿಡಲು ಗ್ರಾಮ ಪಂಚಾಯಿತಿಯಿಂದ ಕ್ರಮ ಕೈಗೊಳ್ಳಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರಸಪ್ಪ ಹೇಳಿದರು.
‘ಉತ್ಸವ ನೋಡಲು ಬರುವವರ ವಾಹನ ನಿಲುಗಡೆಗೆ ವೇದಿಕೆಯ ಬಳಿಯೇ ಸ್ಥಳ ನಿಗದಿ ಮಾಡಲಾಗಿದ್ದು, 3 ಸಿಪಿಐ, 6 ಪಿಎಸ್ಐ ಹಾಗೂ ಗೃಹ ರಕ್ಷಕ ದಳ ಸೇರಿ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, 1 ಕೆಎಸ್ಆರ್ಪಿ, 1 ಡಿಆರ್ ತುಕಡಿಯನ್ನು ಬಂದೋಬಸ್ತಿಗಾಗಿ ನಿಯೋಜನೆ ಮಾಡಲಾಗಿದೆ’ ಎಂದು ಅವರು ವಿವರಿಸಿದರು. ಸಿಪಿಐ ಪ್ರಲ್ಹಾದ್ ಆರ್. ಚೆನ್ನಗಿರಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.