ADVERTISEMENT

ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ; ಪೋಕ್ಸೊ ದಾಖಲು ಕಡ್ಡಾಯ: ಶಶಿಧರ್ ಕೊಸಂಬೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2026, 2:55 IST
Last Updated 1 ಫೆಬ್ರುವರಿ 2026, 2:55 IST
<div class="paragraphs"><p>ಬಳ್ಳಾರಿ ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ&nbsp;ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೊಸಂಬೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು</p></div>

ಬಳ್ಳಾರಿ ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೊಸಂಬೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು

   

ಬಳ್ಳಾರಿ: ‘ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆದಾಗ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸುವುದು ಕಡ್ಡಾಯ. ನಿರ್ಲಕ್ಷ್ಯ ಮಾಡುವವರ ವಿರುದ್ಧ ಕ್ರಮ ಜರುಗಿಸಲು ಕಾನೂನಿನಡಿ ಅವಕಾಶವಿದೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೊಸಂಬೆ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿ, ಮಾತನಾಡಿದರು. 

ADVERTISEMENT

‘ಜಿಲ್ಲೆಯ ಎಲ್ಲಾ ಶಾಲೆಗಳು, ವಸತಿ ನಿಲಯಗಳ ಮಕ್ಕಳಿಗೆ ಯಾವುದೇ ರೀತಿಯ ಹಿಂಸೆ, ದೌರ್ಜನ್ಯ, ಶೋಷಣೆಯಿಂದ ರಕ್ಷಣೆ ಒದಗಿಸುವ ಮೂಲಕ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆ 2012, ಮಕ್ಕಳ ರಕ್ಷಣಾ ನೀತಿ 2016 ಕಾಯ್ದೆಯನ್ನು ತಪ್ಪದೇ ಅನುಷ್ಠಾನಗೊಳಿಸಬೇಕು’ ಎಂದು ಸೂಚಿಸಿದರು. 

‘ಜಿಲ್ಲೆಯಲ್ಲಿ ಮಕ್ಕಳು ಕಾಣೆಯಾದ ಪ್ರಕರಣಗಳು ದಾಖಲಾಗಿದ್ದು, ಹಲವು ಪ್ರಕರಣಗಳು ಇನ್ನೂ ಪತ್ತೆಯಾಗಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಕುರಿತು ಕೈಗೊಂಡ ಕ್ರಮದ ಕುರಿತು ವರದಿ ನೀಡಬೇಕು’ ಎಂದರು.

‘ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾನೂನು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು, ಬಾಲ್ಯವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕಲು ವಿವಿಧ ಇಲಾಖೆಗಳ ಸಹಕಾರ ಅಗತ್ಯ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದು ತಿಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

‘ಸಾಮಾಜಿಕ ಜಾಲತಾಣಗಳಿಂದ ಮಕ್ಕಳಿಗೆ ಆಪತ್ತು’

ಶಾಲಾ ಮಕ್ಕಳು ಪೋಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಶಶಿಧರ ಕೋಸಂಬೆ ‘ರಾಜ್ಯದ 5 ಜಿಲ್ಲೆಗಳಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಶೇ 42ರಷ್ಟು ಮಕ್ಕಳು ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು. ‘1989ರ ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ಸಹಿ ಹಾಕಿ ಮೂರು ದಶಕಗಳೇ ಕಳೆದರೂ ಮಕ್ಕಳ ಸುರಕ್ಷತೆ ಇಂದಿಗೂ ಸವಾಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.