ಬಳ್ಳಾರಿ: ಮಹಿಳಾ ಮತ್ತು ಮಕ್ಕಳ ಸಮಸ್ಯೆಗಳು ಹಾಗೂ ಅವರ ದೂರುಗಳಿಗೆ ತಕ್ಷಣವ ಸ್ಪಂದಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನಿರ್ಭಯಾ ನಿಧಿ ಅಡಿ ಬಳ್ಳಾರಿ ಜಿಲ್ಲೆಗೆ ಮಂಜೂರಾಗಿರುವ ಒಟ್ಟು 39 ಬೈಕ್ ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ನಗರದ ಡಿಎಆರ್ ಮೈದಾನದಲ್ಲಿ ಸಿಬ್ಬಂದುಗೆ ಶನಿವಾರ ವಿತರಿಸಿದರು.
ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಹಿಳೆ ಮತ್ತು ಮಕ್ಕಳ ಸಮಸ್ಯೆಗಳು ಹಾಗೂ ದೂರುಗಳಿಗೆ ನಮ್ಮ ಅಧಿಕಾರಿಗಳು ಹಾಗೂ ಸಿಬ್ಬಂದಿ ತಕ್ಷಣ ತೆರಳಿ ಸ್ಪಂದಿಸುವುದಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ನಿರ್ಭಯಾ ನಿಧಿ ಸೇರಿದಂತೆ ವಿವಿಧ ಅನುದಾನಗಳಡಿ ಸೌಕರ್ಯಗಳನ್ನು ಸರ್ಕಾರ ನೀಡುತ್ತಿದ್ದು,ಈ ಮೂಲಕ ಠಾಣೆಗಳ ಬಲವರ್ಧನೆಯಾಗುತ್ತಿವೆ ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಮಾತನಾಡಿ, ಹಿಂದಿನ ವರ್ಷ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ 30 ಸದಸ್ಯರ ಒಳಗೊಂಡ ದುರ್ಗಾ ತಂಡಗಳನ್ನು ರಚಿಸಲಾಗಿತ್ತು;ಅವುಗಳು ಬಳ್ಳಾರಿ ಮತ್ತು ಹೊಸಪೇಟೆ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು,ಮುಂದಿನ ದಿನಗಳಲ್ಲಿ ಎಲ್ಲ ತಾಲೂಕು ಕೇಂದ್ರಗಳಲ್ಲಿ ಈ ತಂಡಗಳನ್ನು ವಿಸ್ತರಿಸಲಾಗುವುದು ಎಂದರು.
ನಂತರ ನೂತನ ಬೈಕ್ ಗಳಲ್ಲಿ ಪೊಲೀಸರು ಸಂಚಾರ ನಿಯಮಗಳ ಕುರಿತು ಹಾಗೂ ಕಡ್ಡಾಯ ಹೆಲ್ಮೆಟ್ ಕುರಿತು ನಗರದ ವಿವಿಧೆಡೆ ಸಂಚರಿಸುವ ಮೂಲಕ ಜಾಗೃತಿ ಮೂಡಿಸಿದರು.
ಡಿವೈಎಸ್ಪಿಗಳಾದ ಸರ್ದಾರ್, ರಮೇಶಕುಮಾರ, ಸತ್ಯನಾರಾಯಣ, ಸಿಪಿಐಗಳಾದ ನಾಗರಾಜ ಮಡಿವಾಳ, ಸುಭಾಷ, ನಾಗರಾಜ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.