ADVERTISEMENT

ಕೈಯಲ್ಲಿ ‘ಇಳಿಗುಂಡಿ’ ಸ್ವಚ್ಛಗೊಳಿಸುವವರ ಸಮೀಕ್ಷೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2023, 15:40 IST
Last Updated 23 ಜೂನ್ 2023, 15:40 IST

ಬಳ್ಳಾರಿ: ‘ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆ ನಡೆಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೈಯಲ್ಲಿ ‘ಚರಂಡಿ ಇಳಿಗುಂಡಿ’ (ಮ್ಯಾನ್‌ಹೋಲ್‌)  ಸ್ವಚ್ಛತೆ ನಿಷೇಧ ಮತ್ತು  ಪುನರ್ವಸತಿ ಕಾಯ್ದೆ 2013 ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯ ಎಲ್ಲಾ ಸಫಾಯಿ ಕರ್ಮಚಾರಿಗಳಿಗೆ ವಸತಿ ಸೌಲಭ್ಯ ಇದೆಯೇ ಎಂಬ ಬಗ್ಗೆ ಸಮೀಕ್ಷೆ ಮಾಡಿ, ನಿವೇಶನ ರಹಿತರಿಗೆ  ನಿವೇಶನ ಸೌಲಭ್ಯ ಕಲ್ಪಿಸಬೇಕು. ಹಿಂದೆ ನಿವೇಶನ ಪಡೆದು ಕಾಮಗಾರಿ ನಡೆಸುತ್ತಿರುವ ಫಲಾನುಭವಿಗಳಿಗೆ ಬಾಕಿ ಕಂತಿನ ಹಣ ಬಿಡುಗಡೆಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಸುತ್ತಿರುವ ಪೌರಕಾರ್ಮಿಕರಿಗೆ ಕನಿಷ್ಟ ವೇತನ ಮತ್ತು ಇ.ಎಸ್.ಐ, ಪಿ.ಎಫ್ ಪಾವತಿಯಾಗುತ್ತಿರುವ ಕುರಿತು ಪರಿಶೀಲಿಸಿದರು. ಸಕಾಲದಲ್ಲಿ ಇ.ಎಸ್.ಐ, ಪಿ.ಎಫ್ ಪಾವತಿಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ತೋರುವಂತಿಲ್ಲ ಎಂದರು.

ಜಿಲ್ಲೆಯಲ್ಲಿ ಮಂಜೂರಾದ ಸಮುದಾಯ ಸ್ಯಾನಿಟರಿ ಶೌಚಾಲಯಗಳ ಕಾಮಗಾರಿ ಪ್ರಾರಂಭಿಸಬೇಕು. ಅಪೂರ್ಣಗೊಂಡ ಕಾಮಗಾರಿಗಳನ್ನೂ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಪಂ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣಾ ಶಿಬಿರ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಆರೋಗ್ಯ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಕೀನಾ ಸೇರಿದಂತೆ ನಗರಸಭೆ, ಪುರಸಭೆಯ ಅಧಿಕಾರಿಗಳು, ವಿವಿಧ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.