ಹೊಸಪೇಟೆ (ವಿಜಯನಗರ): ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಿ, ದಾಳಿ ನಡೆಸಿದ ಘಟನೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದವು.
ಎಸ್ಡಿಪಿಐ:
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು, ಘಟನೆ ಖಂಡಿಸಿ ಘೋಷಣೆ ಕೂಗಿದರು. ಬಳಿಕ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಗುರುಬಸವರಾಜ ಅವರಿಗೆ ಸಲ್ಲಿಸಿದರು.
ಪಕ್ಷದ ಉಪಾಧ್ಯಕ್ಷ ನಜೀರ್ ಖಾನ್ ಮಾತನಾಡಿ, ರೈತ ಸಂಘದ ಆತ್ಮಾವಲೋಕನ ಸಭೆಯಲ್ಲಿದ್ದ ರೈತ ಆಂದೋಲನದ ಪ್ರಮುಖ ನಾಯಕ ರಾಕೇಶ್ ಟಿಕಾಯತ್ ಮೇಲೆ ಆರ್ಎಸ್ಎಸ್ನವರು ಮಸಿ ಎರಚಿ ದಾಳಿ ನಡೆಸಿದ್ದು ಅಕ್ಷಮ್ಯ, ಅವರ ವಿರುದ್ಧ ಪ್ರಕರಣ ದಾಖಲಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು. ಪಕ್ಷದ ಅಧ್ಯಕ್ಷ ವಲಿ ಬಾಷ, ಪ್ರಧಾನ ಕಾರ್ಯದರ್ಶಿ ಜೆ.ಹಬೀಬುಲ್ಲಾ, ಕಾರ್ಯದರ್ಶಿ ಇರ್ಫಾನ್ ಕಟಿಗಿ ಇತರರಿದ್ದರು.
ಕರ್ನಾಟಕ ರೈತ ಸಂಘ:
ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿದ ಕರ್ನಾಟಕ ರೈತ ಸಂಘದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಮನವಿ ಪತ್ರ ಸಲ್ಲಿಸಿದರು.
ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸರಳ ಕಾವ್ಯ ಮಾತನಾಡಿ, ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಿ ರೈತ ಹೋರಾಟದ ವಿರುದ್ಧ ಬಿಜೆಪಿ ಷಡ್ಯಂತರ ರೂಪಿಸುತ್ತಿದೆ. ಅದಕ್ಕಾಗಿ ಕೂಡಲೇ ಕ್ಷಮೆಯಾಚಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಜಿ.ಶಂಕರ್, ಜ್ಯೋತಿ ಕನಕಮ್ಮವರ್ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.