ADVERTISEMENT

ನಗರಸಭೆ ನಿಷ್ಕ್ರಿಯತೆ ವಿರುದ್ಧ ಪ್ರತಿಭಟನೆ

ಹಣವಂತರಿಗಷ್ಟೇ ನಗರಸಭೆಯಲ್ಲಿ ಸುಲಭದಲ್ಲಿ ಕೆಲಸ ಆರೋಪ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 7:34 IST
Last Updated 23 ಫೆಬ್ರುವರಿ 2021, 7:34 IST
ಸಕಾಲಕ್ಕೆ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡುತ್ತಿಲ್ಲ ಎಂದು ಆರೋಪಿಸಿ ಜನಪರ ವೇದಿಕೆಯ ಕಾರ್ಯಕರ್ತರು ಮಂಗಳವಾರ ಹೊಸಪೇಟೆ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ
ಸಕಾಲಕ್ಕೆ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡುತ್ತಿಲ್ಲ ಎಂದು ಆರೋಪಿಸಿ ಜನಪರ ವೇದಿಕೆಯ ಕಾರ್ಯಕರ್ತರು ಮಂಗಳವಾರ ಹೊಸಪೇಟೆ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ   

ವಿಜಯನಗರ (ಹೊಸಪೇಟೆ): ಫಾರಂ ನಂಬರ್‌ 3 ಸರ್ಕಾರದ ನಿಗದಿತ ಕಾಲಮಿತಿಯಲ್ಲಿ ಸಾರ್ವಜನಿಕರಿಗೆ ನೀಡುವಂತೆ ಆಗ್ರಹಿಸಿ ಜನಪರ ವೇದಿಕೆಯ ಕಾರ್ಯಕರ್ತರು ಮಂಗಳವಾರ ಇಲ್ಲಿನ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರಸಭೆಯಲ್ಲಿ ಜನಸಾಮಾನ್ಯರಿಗೆ ಸಂಬಂಧಿಸಿದ ಯಾವುದೇ ಕೆಲಸಗಳು ತ್ವರಿತ ಗತಿಯಲ್ಲಿ ಆಗುತ್ತಿಲ್ಲ. ಸಕಾಲ ಯೋಜನೆಯಡಿ ಇಂತಿಷ್ಟೇ ದಿನಗಳೊಳಗೆ ಸಾರ್ವಜನಿಕರ ಕೆಲಸಗಳು ಆಗಬೇಕು. ಆದರೆ, ಅದ್ಯಾವುದೂ ಆಗುತ್ತಿಲ್ಲ. ನಗರಸಭೆ ಹಣವಂತರಿಗೆ ಮಾತ್ರ ಎನ್ನುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ನಂತರ ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಗರಸಭೆ ಅಧಿಕಾರಿಗಳು ಹಿಟ್ಲರ್‌ನಂತೆ ವರ್ತಿಸುತ್ತಿದ್ದಾರೆ. ಫಾರಂ ನಂಬರ್‌ 3, ಖಾತಾ ಬದಲಾವಣೆ, ಜನನ ಮತ್ತು ಮರಣ ಪ್ರಮಾಣ ಪತ್ರ ಕೊಡಲು ಸಾಕಷ್ಟು ವಿಳಂಬ ಮಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿಯೇ ಇಲ್ಲಿನ ನಗರಸಭೆ ಅತ್ಯಂತ ನಿಷ್ಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ. ಅದಕ್ಕೆ ಚುರುಕು ಮುಟ್ಟಿಸುವ ಕೆಲಸ ಮೇಲಧಿಕಾರಿಗಳಿಂದ ಆಗುತ್ತಿಲ್ಲ ಎಂದು ದೂರಿದರು.

ADVERTISEMENT

ಸಿಬ್ಬಂದಿ ಕೊರತೆಯು ಕೆಲಸ ವಿಳಂಬಕ್ಕೆ ಕಾರಣವಾಗಿದ್ದು, ಆದಷ್ಟು ಶೀಘ್ರ ಹೊರಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ತಾತ್ಕಾಲಿಕ ಹುದ್ದೆ ತುಂಬಬೇಕು. ಅರ್ಜಿಗಳ ಸ್ಥಿತಿಗತಿ ತಿಳಿಯಲು ಪ್ರತ್ಯೇಕ ಕೌಂಟರ್‌ ತೆರೆಯಬೇಕು. ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು. ಬಿಡಾಡಿ ದನ, ಹಂದಿ, ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ವೇದಿಕೆಯ ಅಧ್ಯಕ್ಷ ಡಿ. ವೆಂಕಟರಮಣ, ಪ್ರಧಾನ ಕಾರ್ಯದರ್ಶಿ. ಸಿ. ಗೋವಿಂದರಾಜ್‌, ಮುಖಂಡರಾದ ಪ್ರಕಾಶ್‌ಬಾಬು, ರಮೇಶ, ಕೃಷ್ಣ, ನಿಜಾಮುದ್ದೀನ್‌, ರಾಮಚಂದ್ರಬಾಬು, ಅಲ್ಲಾಭಕ್ಷಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.