ADVERTISEMENT

ತೈಲ ದರ ಏರಿಕೆ ವಿರೋಧಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 9:06 IST
Last Updated 9 ಜೂನ್ 2021, 9:06 IST
ತೈಲ ದರ ಏರಿಕೆ ವಿರೋಧಿಸಿ ಸಿಪಿಐ (ಎಂ) ಕಾರ್ಯಕರ್ತರು ಬುಧವಾರ ಹೊಸಪೇಟೆಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು
ತೈಲ ದರ ಏರಿಕೆ ವಿರೋಧಿಸಿ ಸಿಪಿಐ (ಎಂ) ಕಾರ್ಯಕರ್ತರು ಬುಧವಾರ ಹೊಸಪೇಟೆಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು   

ಹೊಸಪೇಟೆ (ವಿಜಯನಗರ): ಸತತವಾಗಿ ತೈಲ ದರ ಹೆಚ್ಚಳವಾಗುತ್ತಿರುವುದನ್ನು ಖಂಡಿಸಿ ಸಿಪಿಐ (ಎಂ) ಕಾರ್ಯಕರ್ತರು ಬುಧವಾರ ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ನಗರದ ಶ್ರಮಿಕ ಭವನದ ಎದುರು ಸೇರಿದ ಕಾರ್ಯಕರ್ತರು, ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ, ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪಕ್ಷದ ಕಾರ್ಯದರ್ಶಿ ಆರ್‌. ಭಾಸ್ಕರ್‌ ರೆಡ್ಡಿ ಮಾತನಾಡಿ, ‘ಕೋವಿಡ್‌ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಸಿರುವುದು ಜನವಿರೋಧಿ ನೀತಿಯಾಗಿದೆ. ಬಳ್ಳಾರಿ–ವಿಜಯನಗರ ಜಿಲ್ಲೆಯಲ್ಲಿ ಪೆಟ್ರೋಲ್‌ ದರ ನೂರು ರೂಪಾಯಿ ಗಡಿ ದಾಟಿದೆ. ಸರ್ಕಾರದ ಈ ನೀತಿ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ. ಲಾಕ್‌ಡೌನ್‌ ಇಲ್ಲದಿದ್ದರೆ ಜನ ಬೀದಿಗಿಳಿಯುತ್ತಿದ್ದರು’ ಎಂದು ಹೇಳಿದರು.

ADVERTISEMENT

ಮುಖಂಡ ಎ ಕರುಣಾನಿಧಿ ಮಾತನಾಡಿ, ‘ತೈಲ ಉತ್ಪನ್ನಗಳ ಮೇಲಿನ ಸುಂಕ ಕಡಿಮೆಗೊಳಿಸಿದರೆ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆಯಾಗುತ್ತದೆ. ಜಿಎಸ್‌ಟಿ ವ್ಯಾಪ್ತಿಗೆ ತಂದರೆ ₹50ರ ಆಸುಪಾಸಿಗೆ ತೈಲ ದರ ಇಳಿಕೆಯಾಗುತ್ತದೆ. ಆದರೆ, ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ತೈಲ ದರ ಏರಿಕೆಯಾಗಿರುವುದರಿಂದ ಬರುವ ದಿನಗಳಲ್ಲಿ ತರಕಾರಿ, ಹಣ್ಣು, ದಿನಸಿ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತದೆ. ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ’ ಎಂದರು.

ಮುಖಂಡರಾದ ಎಂ ಜಂಬಯ್ಯ ನಾಯಕ, ಎಂ. ಗೋಪಾಲ, ಯಲ್ಲಾಲಿಂಗ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.