ಹೊಸಪೇಟೆ (ವಿಜಯನಗರ): ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯಿಂದ ನಗರದಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಬುಧವಾರ ಮೂರನೇ ದಿನಕ್ಕೆ ಕಾಲಿರಿಸಿತು. ಪ್ರತಿಭಟನಾಕಾರರು ಸಂಜೆ ಮದಕರಿ ನಾಯಕ ವೃತ್ತದಲ್ಲಿ ರಸ್ತೆತಡೆ ಚಳವಳಿ ನಡೆಸಿದರು.
ಧರಣಿಯನ್ನು ಬೆಂಬಲಿಸಿ ಅದರಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಜೆ.ಎನ್.ಗಣೇಶ್, ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹೆಚ್ಚಿಸಬೇಕೆಂದು ಆಗ್ರಹಿಸಿ ಹರಿಹರದ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಹಲವು ದಿನಗಳಿಂದ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದಾರೆ. ನಾನು ಕೂಡ ಅವರನ್ನು ಬೆಂಬಲಿಸಿ ಪಾಲ್ಗೊಂಡಿದ್ದೆ. ಇಲ್ಲಿ ನಡೆಸುತ್ತಿರುವ ಧರಣಿಗೂ ನನ್ನ ಬೆಂಬಲವಿದೆ ಎಂದು ತಿಳಿಸಿದರು.
ಇದು, ನಿನ್ನೆ ಮೊನ್ನೆಯ ಬೇಡಿಕೆಯಲ್ಲ. ಹಲವು ವರ್ಷಗಳ ಬೇಡಿಕೆ. ರಾಜ್ಯ ಸರ್ಕಾರ ಕಾಲಹರಣ ಮಾಡದೇ ನ್ಯಾಯಯುತ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.
ಬೆಳಗಾವಿಯ ಗುತ್ತಿಗೆದಾರರ ಸಂತೋಷ್ ಪಾಟೀಲ ಅವರ ಸಾವಿಗೆ ಸಂಬಂಧಿಸಿದಂತೆ ಅವರ ಕುಟುಂಬದವರೇ ನೇರವಾಗಿ ಸಚಿವ ಈಶ್ವರಪ್ಪನವರ ವಿರುದ್ಧ ಆರೋಪ ಮಾಡಿರುವುದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.