ADVERTISEMENT

ರೈಲ್ವೆ ಮಾರ್ಗಕ್ಕಾಗಿ ಎಲ್ಲರ ಸಹಕಾರ ಅಗತ್ಯ

ಕರ್ನಾಟಕ ರೈಲ್ವೆ ಕ್ರಿಯಾ ಸಮಿತಿ ಸಭೆಯಲ್ಲಿ ಅಧ್ಯಕ್ಷ ಮಹೇಶ್ವರಯ್ಯಸ್ವಾಮಿ ಅಭಿಮತ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 5:50 IST
Last Updated 7 ಆಗಸ್ಟ್ 2025, 5:50 IST
ಸಿರುಗುಪ್ಪದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕಿನ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಹಾಗೂ ಮುಖಂಡರ ಸಭೆಯಲ್ಲಿ ಕರ್ನಾಟಕ ರೈಲ್ವೆ ಕ್ರಿಯಾ ಸಮಿತಿ ಅಧ್ಯಕ್ಷ ಮಹೇಶ್ವರಯ್ಯಸ್ವಾಮಿ ಮಾತನಾಡಿದರು
ಸಿರುಗುಪ್ಪದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕಿನ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಹಾಗೂ ಮುಖಂಡರ ಸಭೆಯಲ್ಲಿ ಕರ್ನಾಟಕ ರೈಲ್ವೆ ಕ್ರಿಯಾ ಸಮಿತಿ ಅಧ್ಯಕ್ಷ ಮಹೇಶ್ವರಯ್ಯಸ್ವಾಮಿ ಮಾತನಾಡಿದರು   

ಸಿರುಗುಪ್ಪ: ಬಳ್ಳಾರಿ, ಲಿಂಗಸೂಗೂರು ಬ್ರಾಡ್‌ಗೇಜ್ ರೈಲ್ವೆ ಮಾರ್ಗದ ನಿರ್ಮಾಣಕ್ಕಾಗಿ ದೆಹಲಿಗೆ ತೆರಳಿ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಬೇಕು. ಇದಕ್ಕಾಗಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕರ್ನಾಟಕ ರೈಲ್ವೆ ಕ್ರಿಯಾ ಸಮಿತಿ ಅಧ್ಯಕ್ಷ ಮಹೇಶ್ವರಯ್ಯಸ್ವಾಮಿ ತಿಳಿಸಿದರು.

ನಗರದ ಶ್ರೀಶೈಲ ಶಿವಶಕ್ತಿ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯ ವತಿಯಿಂದ ಬುಧವಾರ ಹಮ್ಮಿಕೊಂಡ ತಾಲ್ಲೂಕಿನ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಸಿರುಗುಪ್ಪ ನಗರಕ್ಕೆ ನೂತನ ರೈಲ್ವೆ ಬ್ರಾಡ್‌ಗೇಜ್‌ ಮಾರ್ಗದ ನಿರ್ಮಾಣಕ್ಕಾಗಿ 201ರಲ್ಲಿ ರೈಲ್ವೆ ಮಂತ್ರಿಗಳಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಲಿಂಗಸುಗೂರು- ಸಿಂಧನೂರು- ಸಿರುಗುಪ್ಪ-ಬಳ್ಳಾರಿಗೆ ನೂತನ ಬ್ರಾಡ್‌ಗೇಜ್‌ ಮಾರ್ಗಕ್ಕಾಗಿ ಸರ್ವೆ ಪ್ರಸ್ತಾವನೆಯನ್ನು ರೈಲ್ವೆ ಬಜೆಟ್‌ನಲ್ಲಿ ಮಂಡಿಸಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಕಾರ್ಯರೂಪಕ್ಕೆ ಬಂದಿರುವುದಿಲ್ಲ ಎಂದರು.

ADVERTISEMENT

2014ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ರೈಲ್ವೆ ಮಂತ್ರಿಗಳಾಗಿದ್ದ ಸದಾನಂದ ಗೌಡ ಅವರು ಗಬ್ಬೂರು-ಸಿಂಧನೂರು-ಸಿರುಗುಪ್ಪ-ಬಳ್ಳಾರಿ ನೂತನ ಬ್ರಾಡ್‌ಗೇಜ್‌ ರೈಲ್ವೆ ಮಾರ್ಗದ ಸರ್ವೆಯ ಪ್ರಸ್ತಾವನೆಯನ್ನು ತಮ್ಮ ರೈಲ್ವೆ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಆದರೆ ಇಲ್ಲಿಯವರೆಗೂ ಕಾರ್ಯರೂಪಕ್ಕೆ ಬಂದಿರುವುದಿಲ್ಲ. ಅದಕ್ಕಾಗಿ ಹೊಸದಾಗಿ ನಾವು ಕೇಂದ್ರ ಸರ್ಕಾರಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಹೇಳಿದರು.

ದೆಹಲಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಶೀಘ್ರದಲ್ಲಿಯೇ ನಮ್ಮ ಜಿಲ್ಲೆಯಿಂದ ರೈಲ್ವೆ ಯೋಜನೆಗೆ ಒತ್ತಾಯಿಸಿ ನಿಯೋಗದ ಮೂಲಕ ರೈಲ್ವೆ ಕೇಂದ್ರ ಮಂತ್ರಿ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಪತ್ರವನ್ನು ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.

ರೈಲ್ವೆ ಯೋಜನೆಯು ಜಾರಿಯಾಗಬೇಕಾದರೆ ಕೇಂದ್ರ ಮತ್ತು ರಾಜ್ಯಸರ್ಕಾರ ಸಹಕಾರ ಅಗತ್ಯವಾಗಿ ಬೇಕಾಗಿರುತ್ತದೆ ಎಂದರು.

ಮಾಜಿ ಶಾಸಕ ಎಂ.ಎಸ್ ಸೋಮಲಿಂಗಪ್ಪ ಮಾತನಾಡಿದರು.

ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ, ಮಾಜಿ ಶಾಸಕ ಟಿ.ಎಂ.ಚಂದ್ರಶೇಖರಯ್ಯ ಸ್ವಾಮಿ, ವಾಲ್ಮೀಕಿ ವಿದ್ಯಾಭಿವೃದ್ದಿ ಟ್ರಸ್ಟ್‌ ಅಧ್ಯಕ್ಷ ಬಿ.ಎಂ.ಸತೀಶ್‌, ತೆಕ್ಕಲಕೋಟೆ ಪಟ್ಟಣ ಪಂಚಾಯತಿ ಅಧ್ಯಕ್ಷ ಎಸ್.ಆನಂದ, ಅಕ್ಕಿಗಿರಿಣಿ ಮಾಲೀಕರ ಸಂಘದ ಅಧ್ಯಕ್ಷ ಎನ್.ಜಿ.ಬಸವರಾಜಪ್ಪ, ತುಂಗಭದ್ರ ರೈತರ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ, ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೋಬ, ನಗರಸಭೆ ಮಾಜಿ ಅಧ್ಯಕ್ಷ ವೆಂಕಟರಾಮರೆಡ್ಡಿ, ಸೇರಿದಂತೆ ವಿವಿಧ ಸಂಘಟನೆಗಾರರು ಹಾಗೂ ಚಿಂತಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.