ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರವಾರ ಆರಂಭವಾದ, ಕಲ್ಯಾಣ ಕರ್ನಾಟಕ ಪ್ರದೇಶದ ಪಿಎಸ್ಐ (ಇಂಡಿಯನ್ ರಿಸರ್ವ್ ಬೆಟಾಲಿಯನ್) ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ಮಳೆಯಿಂದಾಗಿ ಮುಂದೂಡಲಾಯಿತು.
ಏಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದವರ ಪೈಕಿ 600 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಪ್ರತಿ ತಂಡದಲ್ಲಿ 30 ಅಭ್ಯರ್ಥಿಗಳಂತೆ ಮೂರು ತಂಡಗಳ ಓಟದ ಸ್ಪರ್ಧೆ ಪೂರ್ಣಗೊಂಡು, ನಾಲ್ಕನೇ ತಂಡದ ಅಭ್ಯರ್ಥಿಗಳು ಓಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾಗಲೇ ಮಳೆ ಜೋರಾದ ಕಾರಣ ಸ್ಪರ್ಧೆಯನ್ನು ಮೊಟಕುಗೊಳಿಸಲಾಯಿತು.
ಪರೀಕ್ಷೆಯನ್ನು ಮುಂದೂಡಿದ್ದರಿಂದ, ಕಲ್ಯಾಣ ಕರ್ನಾಟಕ ಪ್ರದೇಶದ ಯಾದಗಿರಿ, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಯ ಅಭ್ಯರ್ಥಿಗಳು ನಿರಾಶರಾಗಿ ವಾಪಸಾದರು.
‘ಒಂದೇ ದಿನ ನಿಗದಿಯ ಸಮಯದೊಳಗೆ ಎಲ್ಲ ಸ್ಪರ್ಧೆಗಳಲ್ಲೂ ಅಭ್ಯರ್ಥಿಗಳು ಪಾಲ್ಗೊಳ್ಳಬೇಕು ಎಂಬುದು ನಿಯಮ. ಹೀಗಾಗಿ ಓಟದ ಸ್ಪರ್ಧೆಯನ್ನು ಪೂರ್ಣಗೊಳಿಸಿದವರೂ ಮತ್ತೆ ಸ್ಪರ್ಧೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಲೇಬೇಕು’ ಎಂದು ಐಜಿಪಿ ಎಂ.ನಂಜುಂಡಸ್ವಾಮಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.