ಹೊಸಪೇಟೆ: ರಾಜ್ಯ ಸರ್ಕಾರವು ಜಿಂದಾಲ್ ಕಂಪೆನಿಗೆ ಭೂ ಪರಭಾರೆ ಮಾಡಲು ಹೊರಟಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.
ರ್ಯಾಲಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯ ಸರ್ಕಾರ ಪ್ರತಿ ಎಕರೆ ಜಮೀನಿಗೆ ₹1.22 ಲಕ್ಷಕ್ಕೆ ಒಟ್ಟು 3,667 ಎಕರೆ ಜಮೀನು ಜಿಂದಾಲ್ಗೆ ಕೊಡಲು ಮುಂದಾಗಿರುವುದು ಸರಿಯಲ್ಲ. ಇಷ್ಟು ಕಡಿಮೆ ಬೆಲೆಗೆ 20X30 ಅಡಿ ನಿವೇಶನ ಕೂಡ ಸಿಗುವುದಿಲ್ಲ. ಅಂತಹದ್ದರಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರ ರೈತರ ಹಿತ ಬಲಿಕೊಟ್ಟು ಕಡಿಮೆ ಬೆಲೆ ಜಮೀನು ಕೊಡಲು ಮುಂದಾಗಿರುವುದು ನೋಡುತ್ತಿದ್ದರೆ ಇದರಲ್ಲಿ ಅಕ್ರಮ ನಡೆದಿರುವಂತೆ ಕಂಡು ಬರುತ್ತಿದೆ ಎಂದು ಮನವಿಯಲ್ಲಿ ಆರೋಪಿಸಿದರು.
ಸರ್ಕಾರ ಕಂಪೆನಿಗಳಿಗೆ ಅನುಕೂಲ ಮಾಡಿಕೊಟ್ಟು ರೈತರ ಹಿತ ಬಲಿ ಕೊಡುವುದು ಸರಿಯಲ್ಲ. ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಾಲ್ಲೂಕು ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಎನ್.ಎಚ್. ಶ್ರೀನಿವಾಸ್, ನಗರ ಘಟಕದ ಅಧ್ಯಕ್ಷ ಎಸ್.ಎಂ. ಜಾಫರ್ ಸೇರಿದಂತೆ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.