ಲಕ್ಷ್ಮೇಶ್ವರ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಧಾರಾಕಾರ ಮಳೆ ತಾಲ್ಲೂಕಿನಲ್ಲಿ ಹತ್ತು ಹಲವು ಆವಾಂತರಗಳನ್ನು ಸೃಷ್ಟಿಸಿದೆ. ತಾಲ್ಲೂಕಿನ ಕೊನೆಯ ಗ್ರಾಮವಾದ ಮಾಡಳ್ಳಿಯಿಂದ ಗುಂಝಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದು ಸಂಪರ್ಕ ಬಂದ್ ಆಗಿದ್ದು ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ಉದ್ಭವಿಸಿದೆ. ಗುಂಜಳ ರಸ್ತೆಗೆ ಹೊಂದಿಕೊಂಡಂತೆ ಮಾಡಳ್ಳಿ ಗ್ರಾಮದ ನೂರಾರು ಹೆಕ್ಟೇರ್ ಭೂಮಿ ಇದೆ. ಆದರೆ ರಸ್ತೆಯೇ ಕೊಚ್ಚಿಕೊಂಡು ಹೋಗಿರುವುದರಿಂದ ರೈತರಿಗೆ ತಮ್ಮ ಹೊಲಗಳಿಗೆ ಹೋಗಿ ಬರಲು ಮಾರ್ಗವೇ ಇಲ್ಲದಂತಾಗಿದೆ.
ಇನ್ನು ಜೋರು ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿರುವ ದವಸ ಧಾನ್ಯಗಳು ಹಾಳಾಗಿವೆ. ಹೊಲಗಳ ಬದು ಒಡೆದು ಅಪಾರ ಹಾನಿ ಸಂಭವಿಸಿದೆ.
ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಮಾಡಳ್ಳಿಯಿಂದ ಗುಂಜಳ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಶಾಲೆಗೆ ಹೋಗುವ ವಿದ್ಯಾರ್ಥಿಗಳು, ರೈತರು ಸಮಸ್ಯೆಯನ್ನು ಎದುರಿಸುವಂತಾಗಿದೆ ನಮ್ಮದು ತಾಲ್ಲೂಕಿನ ಕೊನೆಯ ಗ್ರಾಮವಾಗಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿದೆ’ ಎಂದು ಮಾಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮರೆಡ್ಡಿ ಸಣ್ಣಹೊಂಬಳ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.