ADVERTISEMENT

ಬಳ್ಳಾರಿ: ಆದಿ ಮಾನವರ ನೆಲೆ ರಕ್ಷಣೆಗೆ ಮುಂದಡಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 3:21 IST
Last Updated 21 ಫೆಬ್ರುವರಿ 2026, 3:21 IST
   

ಬಳ್ಳಾರಿ: ಜಿಲ್ಲೆಯ ಪ್ರಾಗೈತಿಹಾಸಿಕ ನೆಲೆ, ಪ್ರವಾಸಿ ತಾಣವೂ ಆದ ಸಂಗನಕಲ್ಲಿನ ಹೀರೆಗುಡ್ಡಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಚಾರಣ ಕೈಗೊಂಡಿದ್ದು, ಅಲ್ಲಿನ ವ್ಯವಸ್ಥೆ ಪರಿಶೀಲನೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ‘ಸಂಗನಕಲ್ಲು ಬಳ್ಳಾರಿ ಜಿಲ್ಲೆಯ ಅತ್ಯಂತ ಪ್ರಮುಖ ಪ್ರಾಗೈತಿಹಾಸಿಕ ತಾಣಗಳಲ್ಲಿ ಒಂದಾಗಿದ್ದು, ಸಾವಿರಾರು ವರ್ಷಗಳಿಗೆ ಹಿಂದೆ ಈ ಕಲ್ಲಿನ ಬೆಟ್ಟಗಳಲ್ಲಿ ಜನ ವಾಸಿಸುತ್ತಿದ್ದರು. ನವಶಿಲಾಯುಗದ ಮಾನವರ ಜೀವನದ ಅಪೂರ್ವ ನೋಟಗಳು ಇಲ್ಲಿ ಸಿಗುತ್ತವೆ. ಇದರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದು ಹೇಳಿದರು.

‘ಹಿರೇಗುಡ್ಡದ ಮೇಲ್ಭಾಗದಲ್ಲಿರುವ ಅಪರೂಪದ ಶಿಲಾ ಕೆತ್ತನೆಗಳು ಮತ್ತು ರೇಖಾಚಿತ್ರಗಳನ್ನು ವೀಕ್ಷಿಸಲಾಗಿದೆ. ಇವುಗಳು ನವಶಿಲಾಯುಗದ ಕಾಲಕ್ಕೆ ಸೇರಿವೆ ಎಂದು ಗುರುತಿಸಲಾಗಿದ್ದು, ಇವುಗಳ ಐತಿಹಾಸಿಕ ಪ್ರಾಮುಖ್ಯ ಕಾಪಾಡುವುದು ಆದ್ಯತೆಯಾಗಿದೆ’ ಎಂದರು.

ADVERTISEMENT

‘ಈ ತಾಣವನ್ನು ಪ್ರವಾಸಿ ಸ್ನೇಹಿಯಾಗಿಸಲು ಮತ್ತು ಇಲ್ಲಿನ ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಾಗುವುದು. ಇಲ್ಲಿ ನಡೆದಿರುವ ವೈಜ್ಞಾನಿಕ ಸಂಶೋಧನೆಗಳು ನಮ್ಮ ಪೂರ್ವಜರ ಜೀವನಶೈಲಿ ಮತ್ತು ಇತಿಹಾಸದ ಮೇಲೆ ಬೆಳಕು ಚೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿವೆ’ ಎಂದು ಅಭಿಪ್ರಾಯಪಟ್ಟರು.

‘ಜಿಲ್ಲಾಡಳಿತದಿಂದ ಈ ಭೇಟಿಯು ಸಂಗನಕಲ್ಲು ಪ್ರದೇಶವು ಮುಂದಿನ ದಿನಗಳಲ್ಲಿ ಪ್ರಮುಖ ಪ್ರವಾಸಿ ಕೇಂದ್ರವಾಗಿ ಹೊರಹೊಮ್ಮಲು ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ಹೊಂದಿದ್ದೇವೆ’ ಎಂದರು.

ಈ ಪ್ರದೇಶದಲ್ಲಿ ಸಂಶೋಧನೆ ನಡೆಸಿ ಇಲ್ಲಿನ ಐತಿಹಾಸಿಕ ಮಹತ್ವವನ್ನು ಪರಿಚಯಿಸಿದ ಇತಿಹಾಸ ತಜ್ಞ ಪ್ರೊ.ಕೋರಿಶೆಟ್ಟರ್, ಸದಸ್ಯ ಅಹಿರಾಜ್ ಮತ್ತು ಅವರ ತಂಡದ ಶ್ರಮವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೇರ್, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್., ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ., ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ಸಿಬ್ಬಂದಿ ಶ್ರೀಹರಿ ಇದ್ದರು.

ಮೂಲಸೌಕರ್ಯ ಒದಗಿಸಲು ಕ್ರಮ

‘ಅಭಿವೃದ್ಧಿ ಹೆಸರಿನಲ್ಲಿ ಯಾವುದೇ ಕೃತಕ ವಸ್ತುಗಳನ್ನು ಬಳಸದೆ, ಈ ತಾಣದ ನೈಸರ್ಗಿಕ ಪರಿಸರವನ್ನು ಹಾಗೆಯೇ ಉಳಿಸಿಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲು ನಿರ್ಧರಿಸಲಾಗುವುದು. ಸಂಶೋಧಕರು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ತಾಣಕ್ಕೆ ತಲುಪಲು ಸುಸಜ್ಜಿತವಾದ ಕಾಲುದಾರಿ, ಮಾಹಿತಿ ಫಲಕಗಳು ಮತ್ತು ಅಗತ್ಯ ಮಾರ್ಗದರ್ಶನ ಸೌಲಭ್ಯಗಳನ್ನು ಒದಗಿಸಲು ಯೋಜನೆ ರೂಪಿಸಲಾಗುವುದು’ ಎಂದರು.

‘ಈ ತಾಣವು ಈ ಹಿಂದೆ ಅಷ್ಟಾಗಿ ಬೆಳಕಿಗೆ ಬಂದಿರಲಿಲ್ಲ. ಸ್ಥಳ ಪರಿಶೀಲನೆಯು ಅತ್ಯಂತ ಅರ್ಥಪೂರ್ಣವಾಗಿದ್ದು, ಈ ಪ್ರದೇಶವನ್ನು ಮುಂದಿನ ದಿನಗಳಲ್ಲಿ ಯಾವ ರೀತಿ ಅಭಿವೃದ್ಧಿಪಡಿಸಬೇಕು ಮತ್ತು ಪ್ರವಾಸಿಗರನ್ನು ಹೇಗೆ ಆಕರ್ಷಿಸಬೇಕು ಎಂಬ ಯೋಜನೆ ರೂಪಿಸುವ ಕುರಿತು ಒಂದು ಸ್ಪಷ್ಟವಾದ ಚಿತ್ರಣ ದೊರೆತಿದೆ. ಮೂಲಸೌಕರ್ಯಗಳ ಸದ್ಬಳಕೆ ಮತ್ತು ಮುಂದಿನ ಅಭಿವೃದ್ಧಿ ಕಾರ್ಯಗಳ ಕುರಿತು ನೀಲನಕ್ಷೆ ಸಿದ್ಧಪಡಿಸಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.