ADVERTISEMENT

ಸಚಿವ ಶಿವರಾಜ ತಂಗಡಗಿ ರಾಜೀನಾಮೆಗೆ ವೈ.ಎಂ ಸತೀಶ್‌ ಆಗ್ರಹ

ಮಠಕ್ಕೆ ಅನುದಾನ ಬಿಡುಗಡೆ ಮಾಡಲು ಕಮಿಷನ್‌ ಕೇಳಿದ ಆರೋಪ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 5:04 IST
Last Updated 9 ಜುಲೈ 2025, 5:04 IST
ವೈ. ಎಂ ಸತೀಶ್‌
ವೈ. ಎಂ ಸತೀಶ್‌   

ಬಳ್ಳಾರಿ: ನೆಲಮಂಗಲದ ಗಾಣಿಗ ಸಮಾಜದ ಶ್ರೀತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಬಾಕಿ ಅನುದಾನ ಬಿಡುಗಡೆಗೆ ಸಚಿವ ಶಿವರಾಜ ತಂಗಡಗಿ ಲಂಚ ಕೇಳಿದ ಆರೋಪ ಹಿನ್ನೆಲೆಯಲ್ಲಿ ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಮಠಕ್ಕೆ ಬಿಡುಗಡೆಯಾಗಬೇಕಿರುವ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ವೈ.ಎಂ ಸತೀಶ್‌ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿ, ಬಾಕಿ ಹಣ ಬಿಡುಗಡೆಗೆ ತಂಗಡಗಿ ಶೇ 20ರಿಂದ 25ರಷ್ಟು ಕಮಿಷನ್‌ ಕೇಳುತ್ತಿರುವುದು ಖಂಡನೀಯ. ನಾಡಿನ ವಿವಿಧ ಮಠ, ಮಂದಿರಗಳಿಗೆ ಅನುದಾನ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ. ಕಮಿಷನ್‌ಗೆ ಬೇಡಿಕೆ ಇಟ್ಟಿರುವ ಬಗ್ಗೆ ಕೂಡಲೇ ತನಿಖೆಗೆ ಆದೇಶಿಸಬೇಕು’ ಎಂದು ಆಗ್ರಹಿಸಿದರು.

ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠಕ್ಕೆ ಹಿಂದಿನ ಸರ್ಕಾರ ₹3.5 ಕೋಟಿ ಅನುದಾನ ಮಂಜೂರು ಮಾಡಿತ್ತು. ಸುಮಾರು ₹2 ಕೋಟಿ ಬಿಡುಗಡೆಯಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಬಾಕಿ ₹1.5 ಕೋಟಿ ಅನುದಾನ ಬಿಡುಗಡೆಗೆ ಮಠದ ಸ್ವಾಮೀಜಿ ಸಚಿವ ಶಿವರಾಜ್‌ ತಂಗಡಗಿಯವರಿಗೆ ಮನವಿ ಮಾಡಿದ್ದರು. ಆದರೆ, ಏನೂ ಪ್ರಯೋಜನವಾಗದ ಕಾರಣ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಅನುದಾನ ಬಿಡುಗಡೆಗೆ ಸೂಚಿಸಿತ್ತು’ ಎಂದರು. 

ADVERTISEMENT

‘ರಾಜ್ಯ ಸರ್ಕಾರದಲ್ಲಿ ಹಣ ಇಲ್ಲದಂತಾಗಿದೆ. ರಾಜ್ಯದಲ್ಲಿ ಪಡಿತರ ಸಾಗಾಣೆ ಮಾಡುವ ಲಾರಿಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡದ ಹಿನ್ನೆಲೆ ರಾಜ್ಯದಾದ್ಯಂತ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದಾರೆ. ಬಳ್ಳಾರಿಯಲ್ಲೂ 32 ಲಾರಿಗಳು ಸ್ಥಗಿತಗೊಂಡಿವೆ. ಇದರಿಂದ ಪಡಿತರ ಸಾಗಾಣೆ ಬಂದ್‌ ಆಗಿ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಅನುದಾನವಿಲ್ಲವೆಂದು ಶಾಸಕ ಬಸವರಾಜ ರಾಯರೆಡ್ಡಿ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿಸುತ್ತಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್‌ ಕುಮಾರ್‌ ಮೋಕಾ ದೂರಿದರು.

ಗುರು ಪೌರ್ಣಿಮೆ ನಿಮಿತ್ತ ನಗರದ ಶಾಲಾ– ಕಾಲೇಜುಗಳಲ್ಲಿ ಜುಲೈ 10ರಂದು ಬಿಜೆಪಿಯಿಂದ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಪಕ್ಷದ ಮುಖಂಡರಾದ ಕೆ.ಎಸ್‌.ದಿವಾಕರ್‌, ಜಿ.ವೆಂಕಟರಮಣ ಇದ್ದರು.

ಭರತ್‌ ರೆಡ್ಡಿ ದಾಖಲೆ ಕೊಡಲಿ 

ಶಾಸಕ ಭರತ್‌ ರೆಡ್ಡಿ ಅವರು ದೇವಸ್ಥಾನಗಳಿಗೆ ₹5 ಕೋಟಿ ಅನುದಾನ ಬಿಡುಗಡೆ ಮಾಡಿಸಿರುವುದಾಗಿ ಸನ್ಮಾನ ಮಾಡಿಸಿಕೊಂಡಿದ್ದಾರೆ. ಯಾವ ದೇವಸ್ಥಾನಗಳಿಗೆ ಏಷ್ಟು ಅನುದಾನ ನೀಡಿದ್ದಾರೆ ಎಂಬುದನ್ನು ಅವರು ದಾಖಲೆ ಮೂಲಕ ಬಹಿರಂಗಪಡಿಸಬೇಕು ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.