
ಕುರುಗೋಡು: ಸಿರಿಗೇರಿ ಗ್ರಾಮದ ಹಳೇ ಪರಿಶಿಷ್ಟರ ಕಾಲೊನಿಗೆ ಸಮರ್ಪಕವಾಗಿ ನೀರು ಪೂರೈಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಮಹಿಳೆಯರು ಗುರುವಾರ ಖಾಲಿ ಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
‘ನಮ್ಮ ಪ್ರದೇಶಕ್ಕೆ ನೀರು ಸರಬರಾಜು ಮಾಡಲು ನೀರು ಸಂಗ್ರಹ ಟ್ಯಾಂಕ್ ನಿರ್ಮಿಸಲು ಗ್ರಾಮ ಪಂಚಾಯಿತಿ ಯೋಜನೆ ರೂಪಿಸಿತ್ತು. ಆದರೆ ಅಧಿಕಾರಿಗಳು ಬದಲಿ ಪ್ರದೇಶದಲ್ಲಿ ನಿರ್ಮಿಸಿದ್ದಾರೆ. ಹಿಂದಿನ ಶಾಸಕರಲ್ಲಿ ಕಾಲೊನಿಯವರು ಮನವಿಯಿಂದಾಗಿ ಮಾಡಿ ಖಾಸಗಿಯವರ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ ನೀರು ಸರಬರಾಜು ಮಾಡಲಾಗುತ್ತಿತ್ತು. ಇದೇ ಮಾರ್ಗದ ಪೈಪ್ಗಳ ಮೂಲಕ ಎಸ್.ಟಿ. ಕಾಲೊನಿಗೂ ನೀರು ಸರಬರಾಜು ಮಾಡಲಾಗುತ್ತಿದೆ. ಕೆಲವರು ಅನುಮತಿ ಇಲ್ಲದೆ ಮನೆಗಳಿಗೆ ನಲ್ಲಿ ಹಾಕಿಸಿಕೊಂಡಿದ್ದಾರೆ. ಇದರ ಪರಿಣಾಮ ಪರಿಶಿಷ್ಟರ ಕಾಲೊನಿಗೆ ನೀರು ಸರಬರಾಜು ಆಗುತ್ತಿಲ್ಲ’ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಮನವಿ ಸ್ವೀಕರಿಸಿದ ಅಭಿವೃದ್ಧಿ ಅಧಿಕಾರಿ ಎಂ.ಹುಸೇನ್ ಪೀರಾಸಾಬ್, ‘ಗ್ರಾಮೀಣ ನೈರ್ಮಲ್ಯ ಮತ್ತು ನೀರು ಸರಬರಾಜು ಇಲಾಖೆ ಎಂಜಿನಿಯರ್ ಅವರನ್ನು ಗ್ರಾಮಕ್ಕೆ ಕರೆಯಿಸಿ ಸಮಸ್ಯೆಗೆ ಪರಿಹಾರ ನೀಡಲಾಗುವುದು’ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆದರು.
ಕೆ.ದ್ಯಾವಣ್ಣ, ಹುಲುಗಪ್ಪ, ಯರಿಸ್ವಾಮಿ, ತಿಪ್ಪೇಸ್ವಾಮಿ, ಲಕ್ಷ್ಮಣ ಭಂಡಾರಿ, ಸಣ್ಣ ಈರಣ್ಣ, ಕಮ್ಮಕ್ಕ, ಓಂಕಾರಮ್ಮ, ಮಲ್ಲಮ್ಮ ಮತ್ತು ಹುಲುಗಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.