
ಸಿರುಗುಪ್ಪ: ದೇಶದಲ್ಲಿ ದಿನೇ ದಿನೇ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಋಣಮುಕ್ತ ಕಾಯ್ದೆ ಜಾರಿಗೊಳಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕಾಂ.ಯು. ಬಸವರಾಜ್ ಹೇಳಿದರು.
ನಗರದ ಎಪಿಎಂಸಿಯಲ್ಲಿನ ಶ್ರಮಿಕರ ಭವನದಲ್ಲಿ ಮಂಗಳವಾರ ನಡೆದ ಕರ್ನಾಟಕ ಪ್ರಾಂತ ರೈತ ಸಂಘದ 12ನೇ ವರ್ಷದ ತಾಲ್ಲೂಕು ಸಮ್ಮೇಳನದಲ್ಲಿ ಮಾತನಾಡಿದರು.
‘ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರೈತರ ಬೆಳೆಗೆ ಬೆಂಬಲ ಬೆಲೆ (ಎಂಎಸ್ಪಿ) ಕಾನೂನು ಬದ್ಧವಾಗಿ ಜಾರಿಗೊಳಿಸಬೇಕು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮಾಡಿರುವುದು ರೈತ ಕೂಲಿಕಾರರಿಗೆ ಮಾರಕವಾಗಿದೆ. ಇದನ್ನು ತಕ್ಷಣ ಹಿಂಪಡೆಯಬೇಕು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಮುಂದುವರಿಸಿ, ವರ್ಷಕ್ಕೆ 200 ದಿನ ಕೆಲಸ ಮತ್ತು ಪ್ರತಿ ದಿನಕ್ಕೆ ₹ 600 ಕೂಲಿ ನೀಡಬೇಕು’ ಎಂದು ಒತ್ತಾಯಿಸಿದರು.
ಸರ್ಕಾರಿ ಗೈರಾಣಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ಬಡ ರೈತರಿಗೆ ಹಕ್ಕು ಪತ್ರ ನೀಡಬೇಕು, 60 ವರ್ಷ ಮೇಲ್ಪಟ್ಟ ರೈತರಿಗೆ ತಿಂಗಳಿಗೆ ಪಿಂಚಣಿ ನೀಡಬೇಕು. ಎಲ್ಲ ಬಡ ರೈತರಿಗೆ ಆಶ್ರಯ ಮನೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಮಾರುತಿ, ಹಮಾಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್. ತಿಪ್ಪಯ್ಯ, ಹಮಾಲಿ ಸಂಘದ ತಾಲ್ಲೂಕು ಅಧ್ಯಕ್ಷ ಎಚ್.ಬಿ. ಓಬಳೇಶ್ವರಪ್ಪ, ಮುಖಂಡರಾದ ಸುರೇಶ್, ಈರಮ್ಮ, ಹುಲೇಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.