ADVERTISEMENT

ಈಗಲೂ ಕೋವಿಡ್‌ ಎಚ್ಚರಿಕೆ ಅಗತ್ಯ: ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌

ಸರಳ ವಾಲ್ಮೀಕಿ ಜಯಂತಿಗೆ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 14:58 IST
Last Updated 13 ಅಕ್ಟೋಬರ್ 2021, 14:58 IST

ಹೊಸಪೇಟೆ (ವಿಜಯನಗರ): ‘ಈಗಲೂ ಕೋವಿಡ್‌ ಪ್ರಕರಣಗಳು ವರದಿಯಾಗುತ್ತಿದ್ದು, ಎಚ್ಚರಿಕೆ ವಹಿಸುವುದು ಅಗತ್ಯ. ಎಲ್ಲ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳೊಂದಿಗೆ ಸರಳ ರೀತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ತಿಳಿಸಿದರು.

ವಾಲ್ಮೀಕಿ ಜಯಂತಿ ಪ್ರಯುಕ್ತ ಬುಧವಾರ ನಗರದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್‌ ನಿಯಮದ ಪ್ರಕಾರ ಸರಳ, ಅರ್ಥಪೂರ್ವಾಗಿ ಜಯಂತಿ ಆಚರಿಸಲಾಗುವುದು. ಅದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು. ಜಯಂತಿ ಸುಲಲಿತ ಆಚರಣೆಗೆ ಎಲ್ಲರೂ ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.

‘ಅ.20ರಂದು ಬೆಳಿಗ್ಗೆ 9ಕ್ಕೆ ನೆಹರೂ ಕಾಲೊನಿಯ ಸಹಕಾರಿ ಕಲ್ಯಾಣ ಮಂಟಪದಲ್ಲಿ ಜಯಂತಿ ಆಚರಿಸಲಾಗುವುದು. ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ವಾಲ್ಮೀಕಿ ಸಮಾಜದ ಮುಖಂಡರು ಭಾಗವಗಹಿಸಬೇಕು’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ ಮಾತನಾಡಿ, ‘ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸೋಣ. ಎಲ್ಲ ವರ್ಗದವರು ಸೇರಿಸಿ ಕಾರ್ಯಕ್ರಮ ಮಾಡೋಣ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಭೊಯರ್ ನಾರಾಯಣ ರಾವ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಶಕೀನಾ, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ, ತಹಶೀಲ್ದಾರ್ ಎಚ್.ವಿಶ್ವನಾಥ್, ಮುಖಂಡರಾದ ಗುಜ್ಜಲ್ ನಾಗರಾಜ್, ಕಟಿಗಿ ಬಸವರಾಜ, ತಾಯಪ್ಪ ನಾಯಕ, ಜಂಬಾನಹಳ್ಳಿ ಸತ್ಯನಾರಾಯಣ, ಪೂಜಾರ ದುರುಗಪ್ಪ, ನಾಣಿಕೇರಿ ತಿಮ್ಮಯ್ಯ ಇದ್ದರು.

ಮದ್ಯ ಮಾರಾಟ ನಿಷೇಧ:

ದಸರಾ ಹಬ್ಬದ ಆಚರಣೆಯ ಸಂದರ್ಭದಲ್ಲಿ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅ.14ರ ಸಂಜೆ 6ರಿಂದ ಅ.15ರ ಸಂಜೆ 6ರ ವರೆಗೆ ಹೊಸಪೇಟೆ ನಗರದಾದ್ಯಂತ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ, ಸರಬರಾಜು ಮತ್ತು ಸಾಗಾಣಿಕೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.