ಬಳ್ಳಾರಿ: ನೈಜ ಕಟ್ಟಡ ಕಾರ್ಮಿಕರಿಗೆ ಘೋಷಿತ ಸೌಲಭ್ಯಗಳನ್ನು ಖಾತ್ರಿಪಡಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದಿಂದ ಕಾರ್ಮಿಕ ಇಲಾಖೆ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.
ಕಟ್ಟಡ ಕಾರ್ಮಿಕರು ರಾಜ್ಯವ್ಯಾಪಿ ಹಮ್ಮಿಕೊಂಡಿದ್ದ ಹೋರಾಟದ ಭಾಗವಾಗಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಶೈಕ್ಷಣಿಕ ಸಹಾಯಧನ ಕಡಿತಗೊಳಿಸುವ ಆದೇಶ ಹಿಂಪಡೆಯಬೇಕು, ಎರಡು ವರ್ಷಗಳಿಂದ ಬಾಕಿ ಇರುವ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಬೇಕು, ಹೊಸ ಕಾರ್ಡ್ ಮತ್ತು ನವೀಕರಣವನ್ನು ಸರಳೀಕರಣಗೊಳಿಸಬೇಕು ಎಂದು ಕಾರ್ಮಿಕರು, ಸಂಘಟನೆ ಮುಖಂಡರು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ದೇವದಾಸ್, ‘ನಿರಂತರ ಹೋರಾಟದ ಫಲವಾಗಿ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಯಾಗಿದೆ. ಪ್ರಾರಂಭದಲ್ಲಿ ಕಾರ್ಮಿಕರಿಗೆ ಇದರಿಂದ ಹಲವು ಅನುಕೂಲಗಳಾಗಿದ್ದರೂ, ಇತ್ತೀಚಿಗೆ ಆಗಿರುವ ಬದಲಾವಣೆಗಳಿಂದಾಗಿ ನೈಜ ಕಾರ್ಮಿಕರು ಕಟ್ಟಡ ಕಾರ್ಮಿಕ ಮಂಡಳಿಯ ಸದಸ್ಯತ್ವವನ್ನು ಮುಂದುವರಿಸಿಕೊಂಡು ಹೋಗಲು ಹಾಗೂ ಹೊಸ ಸದಸ್ಯತ್ವ ಪಡೆದುಕೊಳ್ಳಲು ಆಗತ್ತಿಲ್ಲ. ಸದ್ಯದ ವ್ಯವಸ್ಥೆಯಲ್ಲಿ ಅರ್ಜಿ ಹಾಕಲು ಹಲವು ಸಮಸ್ಯೆಗಳಿವೆ’ ಎಂದರು.
ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಕಾರ್ಯದರ್ಶಿ ಜಿ.ಸುರೇಶ್, ಮುಖಂಡರಾದ ಶರ್ಮಾಸ್, ನೀಲಪ್ಪ, ಅಂಜಿನಿ, ಜಯರಾಜ್, ಪ್ರಕಾಶ್, ಮಂಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.