ADVERTISEMENT

ಸಕಾಲಕ್ಕೆ ಬಾರದ ಬಸ್‌: ಆಕ್ರೋಶ

ಬಸ್‌ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2021, 5:02 IST
Last Updated 13 ನವೆಂಬರ್ 2021, 5:02 IST
ತೋರಣಗಲ್ಲು ಸಮೀಪದ ತಾಳೂರು ಗ್ರಾಮದ ಕ್ರಾಸ್‍ನಲ್ಲಿ ಶುಕ್ರವಾರ ಸಾರಿಗೆ ಸಂಸ್ಥೆ ಬಸ್‍ಗಳನ್ನು ತಡೆದ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ತೋರಣಗಲ್ಲು ಸಮೀಪದ ತಾಳೂರು ಗ್ರಾಮದ ಕ್ರಾಸ್‍ನಲ್ಲಿ ಶುಕ್ರವಾರ ಸಾರಿಗೆ ಸಂಸ್ಥೆ ಬಸ್‍ಗಳನ್ನು ತಡೆದ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು   

ತೋರಣಗಲ್ಲು: ಸಮೀಪದ ತಾಳೂರು ಗ್ರಾಮಕ್ಕೆ ಸಾರಿಗೆ ಸಂಸ್ಥೆಯ ಬಸ್‍ಗಳು ಸಕಾಲಕ್ಕೆ ಬರುತ್ತಿಲ್ಲ. ಗ್ರಾಮಕ್ಕೆ ಹೊಂದಿಕೊಂಡಿರುವ ಹೆದ್ದಾರಿಯಲ್ಲಿಯೂ ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಡಿವೈಎಫ್‍ಐ ಮುಖಂಡರು ಬಸ್‍ಗಳನ್ನು ತಡೆದು ಶುಕ್ರವಾರ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು.

ಡಿವೈಎಫ್‍ಐ ಸಂಡೂರು ತಾಲ್ಲೂಕು ಘಟಕ ಅಧ್ಯಕ್ಷ ಎಸ್. ಕಾಲೂಬಾ ಮಾತನಾಡಿ, ಸಂಡೂರು, ಕೂಡ್ಲಿಗಿ, ಬಳ್ಳಾರಿ ಸಾರಿಗೆ ಘಟಕಗಳ ಬಸ್‍ಗಳು ತಾಳೂರು ಗ್ರಾಮದ ಕ್ರಾಸ್‍ನಲ್ಲಿ ನಿಲುಗಡೆ ಮಾಡದಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ನಿತ್ಯ ತರಗತಿಗಳಿಗೆ ಗೈರು ಹಾಜರಾಗಿ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ.

ಗ್ರಾಮದ ಸಾರ್ವಜನಿಕರು ಬಸ್‍ಗಳಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಸಾರಿಗೆ ಸಂಸ್ಥೆ ಅಧಿಕಾರಿಗಳು ಪರಿಶೀಲಿಸಿ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಗ್ರಾಮದ ಕ್ರಾಸ್‍ನಲ್ಲಿ ಬಸ್ ನಿಲುಗಡೆಗೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ADVERTISEMENT

ಸಂಡೂರು, ಬಳ್ಳಾರಿ ಪ್ರಮುಖ ರಸ್ತೆಯಲ್ಲಿ ಅದಿರು ಲಾರಿಗಳ ಅವೈಜ್ಞಾನಿಕ ಸಂಚಾರದಿಂದ ನಿತ್ಯ ಟ್ರಾಫಿಕ್ ಜಾಮ್ ಆಗುತ್ತಿರುವುದರಿಂದ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತಾಳೂರು ಕ್ರಾಸ್ ಬಳಿ ಬಸ್ ನಿಲುಗಡೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಂಡೂರು ಸಾರಿಗೆ ಸಂಸ್ಥೆ ಘಟಕ ವ್ಯವಸ್ಥಾಪಕ ವೆಂಕಟೇಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.