ಬಳ್ಳಾರಿ: ನಗರದ ಸತ್ಯನಾರಾಯಣ ಪೇಟೆ ಬಡಾವಣೆಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಶುಕ್ರವಾರ ಬೆಳಿಗ್ಗೆ ಮಂತ್ರಾಲಯ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಸುದರ್ಶನ ಹೋಮವನ್ನು ನಡೆಯಿತು.
ಇದಕ್ಕೂ ಮುನ್ನ ಬೆಳಿಗ್ಗೆ ಶ್ರೀ ಸುಬುದೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಭಕ್ತರಿಗೆ ತಪ್ತ ಮುದ್ರಧಾರಣೆ ನಡೆಯಿತು. ನಂತರ ಶ್ರೀಗಳು ಸಂಸ್ಥಾನ ಪೂಜೆ ನೆರವೇರಿಸಿದರು.
ಇದಕ್ಕೂ ಮುನ್ನ ಶ್ರೀ ಗುರುರಾಯರಿಗೆ ಶ್ರೀಗಳಿಂದ ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ, ಮಹಾನೈವೇದ್ಯ ಸೇರಿದಂತೆ ವಿವಿಧ ಪೂಜೆಗಳು ವಿಜೃಂಭಣೆಯಿಂದ ನೆರವೇರಿದವು.
ನಂತರ ನಡೆದ ವಿಶೇಷ ಉಪನ್ಯಾಸದಲ್ಲಿ ಸುಬುಧೇಂದ್ರ ತೀರ್ಥ ಶ್ರೀಗಳು ಮಾತನಾಡಿ, ‘ಪ್ರತಿಯೊಬ್ಬರೂ ನಿತ್ಯ ದೇವರ ಪೂಜೆ ಮಾಡಬೇಕು. ನಮ್ಮ ಧರ್ಮವನ್ನು ನಾವು ಕಾಪಾಡಲೇಬೇಕು. ನಮ್ಮ ಸಂಸ್ಕೃತಿ ಉಳಿಯಬೇಕು. ದೇವರು ನಮಗೇನು ಮಾಡಿಲ್ಲ ಎನ್ನುವ ಬದಲು ದೇವರಿಗೆ ನಾವೇನು ಮಾಡಿದ್ದೇವೆ ಎನ್ನುವುದು ಮುಖ್ಯ ಎನ್ನುವಂತೆ, ಪ್ರತಿಯೊಬ್ಬರೂ ನಿತ್ಯ ದೇವರ ಪೂಜೆ ಮಾಡಬೇಕು. ಖಂಡಿತ ಎಲ್ಲರಿಗೂ ಒಳ್ಳೆಯದಾಗಲಿದೆ’ ಎಂದರು.
ಶ್ರೀ ಮಠದ ಆಡಳಿತಾಧಿಕಾರಿ ಪ್ರಸನ್ನಾಚಾರ್ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನಂತರ ಎಲ್ಲ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಮುಖಂಡರು, ಗಣ್ಯರು, ಶ್ರೀಮಠದ ಸಿಬ್ಬಂದಿಗಳು, ನೂರಾರು ಭಕ್ತರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.