
ಬಳ್ಳಾರಿ: ಸ್ವಚ್ಛ ಬಳ್ಳಾರಿ-ಸ್ವಸ್ಥ ಬಳ್ಳಾರಿಯನ್ನಾಗಿಸಲು ಮಹಾನಗರ ಪಾಲಿಕೆಯ ಪ್ರಯತ್ನದ ಜೊತೆಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಮಹಾನಗರ ಪಾಲಿಕೆ ಮಹಾಪೌರ ಪಿ.ಗಾದೆಪ್ಪ ಹೇಳಿದರು.
ನಗರಾಭಿವೃದ್ಧಿ ಇಲಾಖೆ, ಸ್ವಚ್ಛ ಭಾರತ್ ಮಿಷನ್ (ನಗರ) ಹಾಗೂ ಮಹಾನಗರ ಪಾಲಿಕೆ ವತಿಯಿಂದ 2025-26ನೇ ಸಾಲಿನ ಸ್ವಚ್ಛ-ಸರ್ವೇಕ್ಷಣ ಕಾರ್ಯಕ್ರಮದಡಿ ನಗರದ ವಾಲ್ಮೀಕಿ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಶಾಲಾ ಮಕ್ಕಳ ಚಿತ್ರಕಲೆ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಇಡೀ ನಗರವನ್ನು ಪಾಲಿಕೆಯಿಂದ ಮಾತ್ರವೇ ಸ್ವಚ್ಛವಾಗಿಡಲು ಸಾಧ್ಯವಿಲ್ಲ. ನಗರದ 39 ವಾರ್ಡ್ಗಳ ಜನರು ಸಹಕರಿಸಿದರೆ ಮಾತ್ರ ಪೂರ್ಣ ಪ್ರಮಾಣದ ಸ್ವಚ್ಛತೆ ಸಾಧ್ಯ. ಹಾಗಾಗಿ ಪ್ರತಿಯೊಬ್ಬರೂ ಮನೆಯಲ್ಲಿಯೇ ಹಸಿ ಕಸ, ಒಣ ಕಸ ಬೇರ್ಪಡಿಸಿ ಪಾಲಿಕೆಯ ಕಸದ ವಾಹನಗಳಿಗೆ ನೀಡಬೇಕು’ ಎಂದು ಮನವಿ ಮಾಡಿದರು.
ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್ ಮಾತನಾಡಿ, ‘ಮಕ್ಕಳಲ್ಲಿ ಬಾಲ್ಯದಿಂದಲೇ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ಅದಕ್ಕಾಗಿ ಪಾಲಿಕೆ ವತಿಯಿಂದ ಚಿತ್ರಕಲೆ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಉತ್ತಮ ಆರೋಗ್ಯ ಸಾಧ್ಯ’ ಎಂದರು
ಚಿತ್ರಕಲೆ ಸ್ಪರ್ಧೆಯಲ್ಲಿ ಸುಮಾರು 76 ಶಾಲೆಗಳಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿದ್ದ ಎಲ್ಲರಿಗೂ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
‘ವಿಜೇತರಾದವರಿಗೆ, ಫೆ.14 ರಂದು ಸ್ವಚ್ಛತೆ ಕುರಿತಾಗಿ ಹಮ್ಮಿಕೊಂಡಿರುವ ಮ್ಯಾರಾಥಾನ್ ಕಾರ್ಯಕ್ರಮದಲ್ಲಿ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಗುವುದು’ ಎಂದು ತಿಳಿಸಲಾಗಿತ್ತು.
ಮಹಾನಗರ ಪಾಲಿಕೆಯ ಪರಿಸರ ಕಾರ್ಯಪಾಲಕ ಅಭಿಯಂತರ ಮುನಾಫ್ ಪಟೇಲ್, ಪಾಲಿಕೆ ಸದಸ್ಯರಾದ ಕುಬೇರಾ, ರಾಜೇಶ್ವರಿ, ಬಿ.ಜಾನಕಿ ಸೇರಿದಂತೆ ಪಾಲಿಕೆ ಸಿಬ್ಬಂದಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.