ಹೊಸಪೇಟೆ (ವಿಜಯನಗರ): ಕೊರೊನಾ ಹರಡದಂತೆ ತಡೆಯಲು ಜಿಲ್ಲಾಡಳಿತವು ಶನಿವಾರ ಇನ್ನಷ್ಟು ಕ್ರಮಗಳನ್ನು ತೆಗೆದುಕೊಂಡಿದೆ.
ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲ ಸ್ಮಾರಕಗಳಿಗೆ ವಾರಾಂತ್ಯದಲ್ಲಿ ಪ್ರವಾಸಿಗರ ಭೇಟಿ ನಿರ್ಬಂಧಿಸಿದರೆ, ಆಯಾ ದೇವಸ್ಥಾನಗಳಲ್ಲಿ ಹೆಚ್ಚಿನ ಭಕ್ತರು ಸೇರುವ ದಿನಗಳಂದು ಪ್ರವೇಶ ನಿಷೇಧಿಸಿದೆ.
ಈ ಕುರಿತು ಶನಿವಾರ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಈ ಆದೇಶವು ಸೆ. 9ರ ವರೆಗೆ ಜಾರಿಯಲ್ಲಿರುತ್ತದೆ.
ಹೊಸಪೇಟೆಯ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನ, ಜಂಬುನಾಥಸ್ವಾಮಿ ದೇವಸ್ಥಾನಗಳು ಪ್ರತಿ ಸೋಮವಾರ ಮತ್ತು ಅಮವಾಸ್ಯೆ, ವಡಕರಾಯ ರಂಗನಾಥ ಸ್ವಾಮಿ ದೇಗುಲಕ್ಕೆ ಶನಿವಾರ ಜನರ ಪ್ರವೇಶ ನಿರ್ಬಂಧಿಸಲಾಗಿದೆ.
ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಶನಿವಾರದಿಂದ ಸೋಮವಾರದ ವರೆಗೆ ಮತ್ತು ಅಮವಾಸ್ಯೆಯಂದು ಪ್ರವೇಶ ಇರುವುದಿಲ್ಲ. ಹೂವಿನಹಡಗಲಿ ತಾಲ್ಲೂಕಿನ ಮೈಲಾರದ ಮೈಲಾರಲಿಂಗ ಸ್ವಾಮಿ ದೇವಸ್ಥಾನಕ್ಕೆ ಶನಿವಾರ, ಭಾನುವಾರ ಹಾಗೂ ಹುಣ್ಣಿಮೆಯ ದಿನ ಯಾರೂ ಹೋಗುವಂತಿಲ್ಲ.
ಹಡಗಲಿ ತಾಲ್ಲೂಕಿನ ಕುರುವತ್ತಿ ಮಲ್ಲಿಕಾರ್ಜುನ ಮತ್ತು ಬಸವೇಶ್ವರ ಸ್ವಾಮಿ ದೇವಸ್ಥಾನ, ಕೊಟ್ಟೂರಿನ ಗುರು ಬಸವೇಶ್ವರ ದೇವಸ್ಥಾನಗಳಿಗೆ ಭಾನುವಾರ, ಸೋಮವಾರ ಮತ್ತು ಅಮವಾಸ್ಯೆಗೆ ಭೇಟಿ ಕೊಡುವಂತಿಲ್ಲ. ಹಡಗಲಿ ತಾಲ್ಲೂಕಿನ ಮದಲಗಟ್ಟಿಯ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶನಿವಾರ, ಭಾನುವಾರ ಹಾಗೂ ಪ್ರತಿ ಅಮವಾಸ್ಯೆ ಜನರ ದರ್ಶನಕ್ಕೆ ಅವಕಾಶ ಇರುವುದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.