ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಜಮೀರ್

ಕಸಾಪ ಕೇಂದ್ರ ಕಚೇರಿಯಲ್ಲಿ ಸಮ್ಮೇಳನದ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 14:26 IST
Last Updated 1 ಜುಲೈ 2025, 14:26 IST
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವ ಜಮೀರ್ ಅಹಮದ್‌, ಕಸಾಪ ಅಧ್ಯಕ್ಷ ಮಹೇಶ ಜೋಶಿ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್‌ ಹ್ಯಾರಿಸ್‌ ಸುಮೇರ್‌, ಎಸ್‌ಪಿ ಶೋಭಾರಾಣಿ ವಿ.ಜೆ., ಕಸಾಪ ಕೋಶಾಧ್ಯಕ್ಷ ಪಟೇಲ್‌ ಪಾಂಡು ಪಾಲ್ಗೊಂಡರು
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವ ಜಮೀರ್ ಅಹಮದ್‌, ಕಸಾಪ ಅಧ್ಯಕ್ಷ ಮಹೇಶ ಜೋಶಿ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್‌ ಹ್ಯಾರಿಸ್‌ ಸುಮೇರ್‌, ಎಸ್‌ಪಿ ಶೋಭಾರಾಣಿ ವಿ.ಜೆ., ಕಸಾಪ ಕೋಶಾಧ್ಯಕ್ಷ ಪಟೇಲ್‌ ಪಾಂಡು ಪಾಲ್ಗೊಂಡರು   

ಬಳ್ಳಾರಿ: ‘ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟವಾಗಿದ್ದು, ಇದನ್ನು ಚಾರಿತ್ರಿಕವಾಗಿಸಲು ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂಪೂರ್ಣ ಸಹಕಾರ ನೀಡುವೆ’ ಎಂದು ಬಳ್ಳಾರಿ–ವಿಜಯನಗರ ಜಿಲ್ಲೆಗಳ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಮಂಗಳವಾರ ‌ಏರ್ಪಡಿಸಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕನ್ನಡಿಗರ ಹೆಮ್ಮೆಯ ಉತ್ಸವವನ್ನು ಚಾರಿತ್ರಿಕವಾಗಿ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಇದಕ್ಕೆ ಜಿಲ್ಲಾಡಳಿತವನ್ನು ಸಜ್ಜುಗೊಳಿಸಿ ಸರ್ಕಾರದಿಂದ ಬೇಕಾದ ಎಲ್ಲಾ ಸೌಲಭ್ಯ, ನೆರವು ದೊರಕಿಸಿ ಕೊಡಲಾಗುವುದು. ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರ ಇನ್ನಷ್ಟು ನಿಕಟವಾಗಿ ಕೆಲಸ ಮಾಡಲಿದೆ’ ಎಂದರು.

ADVERTISEMENT

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಮಾತನಾಡಿ, ‘ಇಲ್ಲಿಯವರೆಗೆ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಐದು ಸಮ್ಮೇಳನಗಳು ನಡೆದಿದ್ದು, ಇದು ಆರನೇಯದ್ದು. ಸ್ವಾತಂತ್ರ್ಯದ ಬಳಿಕ ಎರಡನೇಯದ್ದು. 68 ವರ್ಷಗಳ ನಂತರ ಬಳ್ಳಾರಿಯಲ್ಲಿ ಸಮ್ಮೇಳನ ನಡೆಯುತ್ತಿದೆ’ ಎಂದು ವಿವರಿಸಿದರು.

2012ರಲ್ಲಿಯೇ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾಗಿದ್ದ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ಸಾಂಕೇತಿಕವಾಗಿ ವಿಶೇಷ ಗುರುತಿನ ಚೀಟಿ ನೀಡಲಾಯಿತು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಬಿ.ಎಂ. ಪಟೇಲ್ ಪಾಂಡು, ಮಾಧ್ಯಮ ಸಂಚಾಲಕರಾದ ಎನ್.ಎಸ್.ಶ್ರೀಧರಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಇದ್ದರು.

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿಯಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಇದಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ
ಪ್ರಶಾಂತ್ ಕುಮಾರ್ ಮಿಶ್ರಾ ಜಿಲ್ಲಾಧಿಕಾರಿ

ಬಾನು ಆಯ್ಕೆ ಶ್ಲಾಘಿಸಿದ ಜಮೀರ್  

ಬಾನು ಮುಷ್ತಾಕ್‌ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದನ್ನು ಜಮೀರ್‌ ಮುಕ್ತ ಕಂಠದಿಂದ ಶ್ಲಾಘಿಸಿದರು. ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ 5ನೇ ಮಹಿಳೆ ಮತ್ತು ಮೊದಲ ಅಲ್ಪಸಂಖ್ಯಾತ ಮಹಿಳೆ ಆಗಲಿದ್ದಾರೆ ಎಂಬ ಸಂಗತಿ ಸಂತೋಷ ತರುವಂಥದ್ದು. ಹೆಚ್ಚಿನದಾಗಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆಸುವ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ’ ಎಂದು ಬಣ್ಣಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.