ADVERTISEMENT

ಎರಡು ಸಾವಿರ ಸಸಿ ನೆಡುವ ಕಾರ್ಯಕ್ರಮ

ಜೂನ್‌ 5ರಂದು ಪರಿಸರ ಸಂರಕ್ಷಣೆ ಜನಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 10:54 IST
Last Updated 3 ಜೂನ್ 2019, 10:54 IST

ಹೊಸಪೇಟೆ: ‘ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಇದೇ 5ರಂದು ನಗರದ ವಿವಿಧ ಭಾಗಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದುರೋಟರಿ ಕ್ಲಬ್ ಅಧ್ಯಕ್ಷ ಡಾ.ವಾಸುದೇವ ರೆಡ್ಡಿ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 9ಕ್ಕೆ ನಗರದ ರೋಟರಿ ಕ್ಲಬ್‌ ಆವರಣದಿಂದ ರೋಟರಿ ವೃತ್ತದ ವರೆಗೆ ಪರಿಸರ ಸಂರಕ್ಷಣೆ ಕುರಿತು ಜನಜಾಗೃತಿ ಜಾಥಾ ನಡೆಸಲಾಗುವುದು’ ಎಂದು ಮಾಹಿತಿ ನೀಡಿದರು.

‘ಪರಿಸರದ ಮೇಲೆ ಸತತವಾಗಿ ದಾಳಿ ನಡೆಸುತ್ತಿರುವುದರಿಂದ ತಾಪಮಾನದಲ್ಲಿ ಏರುಪೇರು ಉಂಟಾಗಿದೆ. ಪ್ರತಿ ವರ್ಷ ಉಷ್ಣತೆ ಹೆಚ್ಚಾಗುತ್ತಿದೆ. ಸಕಾಲಕ್ಕೆ ಮಳೆಯಾಗುತ್ತಿಲ್ಲ. ಇಷ್ಟೆಲ್ಲ ಆಗುತ್ತಿದ್ದರೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಭವಿಷ್ಯದಲ್ಲಿ ಗಂಡಾಂತರ ಖಚಿತ. ಹೀಗಾಗಿ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ’ ಎಂದು ವಿವರಿಸಿದರು.

ADVERTISEMENT

‘ಶಾಲಾ–ಕಾಲೇಜು ಹಾಗೂ ಯುವಕರ ತಂಡಗಳೊಂದಿಗೆ ನಗರದ ವಿವಿಧ ಭಾಗಗಳಲ್ಲಿ ಸಸಿಗಳನ್ನು ನೆಡಲಾಗುವುದು. ಬಳಿಕ ಅವುಗಳು ಬೆಳೆದು ದೊಡ್ಡದಾಗುವವರೆಗೆ ಪೋಷಣೆ ಮಾಡಲಾಗುವುದು. ನಗರದ ಎಲ್ಲ ನಾಗರಿಕರು ಈ ಕೆಲಸಕ್ಕೆ ಸಹಕಾರ ಕೊಡಬೇಕು’ ಎಂದು ಮನವಿ ಮಾಡಿದರು.

‘ಗ್ರೀನ್ ಹೊಸಪೇಟೆ ಸಂಸ್ಥೆ’ಯ ಅಧ್ಯಕ್ಷ ಸುನೀಲ್ ಗೌಡ ಮಾತನಾಡಿ, ‘ಪರಿಸರ ದಿನಾಚರಣೆ ಜಾಗೃತಿ ಜಾಥಾ ಕುರಿತು ಈಗಾಗಲೇ ಸಾಕಷ್ಟು ಪ್ರಚಾರ ಮಾಡಲಾಗಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಾರ್ವಜನಿಕರು ಕೂಡ ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಈ ಕೆಲಸಕ್ಕೆ ಬೆಂಬಲ ಕೊಡಬೇಕು’ ಎಂದು ಕೋರಿದರು.

ಸಂಸ್ಥೆಯ ಸುನೀಲ್ ಗೌಡ, ನಾಗೇಶ್, ಮಲ್ಲೇಶ್,ದೀಪಕ್ ಕುಮಾರ್,ಜೆಸ್ಕಾಂ ಜಾಗೃತ ದಳದ ಇನ್‌ಸ್ಪೆಕ್ಟರ್‌ ಕೆ.ಜಿ. ಗೋವಿಂದರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.