ಹೊಸಪೇಟೆ: ‘ನಗರದಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಕಡ್ಡಾಯವಾಗಿ ತೆರೆದಿಡಲು ಕ್ರಮ ಕೈಗೊಳ್ಳಬೇಕು’ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್. ಭಾಸ್ಕರ್ ರೆಡ್ಡಿ ಆಗ್ರಹಿಸಿದ್ದಾರೆ.
ಈ ಸಂಬಂಧ ಉಪವಿಭಾಗಾಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರಿಗೆ ಪತ್ರ ಬರೆದಿರುವ ಅವರು, ‘ಲಾಕ್ಡೌನ್ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ. ಹೀಗಿದ್ದರೂ ತೆರೆಯುತ್ತಿಲ್ಲ. ಇದರಿಂದಾಗಿ ಜನಸಾಮಾನ್ಯರು, ವಯೋ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ಸಿಗುತ್ತಿಲ್ಲ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಲಾಕ್ಡೌನ್ ಸಂದರ್ಭವನ್ನು ಕೆಲ ಕಿರಾಣಿ ಅಂಗಡಿಗಳು ದುರುಪಯೋಗ ಪಡಿಸಿಕೊಳ್ಳುತ್ತಿವೆ. ಕೃತಕ ಬೆಲೆಯೇರಿಕೆ ಮಾಡಿ ಲಾಭ ಗಳಿಸುತ್ತಿದ್ದಾರೆ. ಹಾಗಾಗಿ ಎಲ್ಲಾ ಮಳಿಗೆಗಳಲ್ಲಿ ವಸ್ತುಗಳ ದರಪಟ್ಟಿ ಪ್ರಕಟಿಸಲು ಸೂಚಿಸಬೇಕು’ ಎಂದು ಆಗ್ರಹಿಸಿದ್ದಾರೆ.
‘ಲಾಕ್ಡೌನ್ನಿಂದ ಕಾರ್ಮಿಕರು, ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ನಿಷೇಧಾಜ್ಞೆಯಿಂದ ಅವರ ಪ್ರಜಾಸತ್ತಾತ್ಮಕ ಹಾಗೂ ಸಾಂವಿಧಾನಿಕ ಹಕ್ಕುಗಳು ಮೊಟಕುಗೊಂಡಿವೆ. ಅವರಲ್ಲಿ ಭಯ ಸೃಷ್ಟಿಸುವ ಕೆಲಸ ನಡೆಯುತ್ತಿದ್ದು, ಅದನ್ನು ತಡೆಯಬೇಕಿದೆ’ ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.