ಬಳ್ಳಾರಿ: ‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ನೋಟಿಸ್ ಹಿಂಪಡೆಯುವ ವಿಶ್ವಾಸವಿದೆ’ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ತೋರಣಗಲ್ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಟಿ.ಜೆ. ಅಬ್ರಹಾಂ ಎಂಬುವರು ದೂರು ನೀಡಿದ ಹಿನ್ನಲೆ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಈ ಹಿಂದೆ ಸುಪ್ರೀಂ ಕೋರ್ಟ್ ಅಬ್ರಹಾಂಗೆ ಬೇರೆ ಪ್ರಕರಣದಲ್ಲಿ ₹25 ಲಕ್ಷ ದಂಡ ವಿಧಿಸಿ, ಛೀಮಾರಿ ಹಾಕಿತ್ತು. ಅಂಥವರ ದೂರು ನಂಬಿ ನೋಟಿಸ್ ನೀಡಿದ್ದು ವಿಪರ್ಯಾಸ’ ಎಂದರು.
‘ಮುಡಾ ಹಗರಣ ಖಂಡಿಸಿ ಮೈಸೂರಿಗೆ ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ನ ಎಲ್ಲ ನಾಯಕರ ಮೇಲೆ ಪ್ರಕರಣಗಳಿವೆ. ಮುಖ್ಯಮಂತ್ರಿಗೆ ನೋಟಿಸ್ ನೀಡುವ ವಿಷಯದಲ್ಲಿ ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಕಷ್ಟದಲ್ಲಿ ಇರುವವರಿಗೆ ನೆರವಾಗುವ ನಾಯಕತ್ವವನ್ನು ನಾವು ಉಳಿಸಿಕೊಳ್ಳಬೇಕಿದೆ. ಆದ್ದರಿಂದ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಜನಾಂದೋಲನ ರೂಪಿಸಲಾಗುವುದು’ ಎಂದರು.
‘ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರೇ ರಾಜ್ಯಪಾಲರ ನೋಟಿಸ್ಗೆ ಉತ್ತರಿಸುವರು. ಮುಡಾ ನಿವೇಶನ ಹಂಚಿಕೆ ವೇಳೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಈಗ ರಾಜಕೀಯ ಮಾಡಲು ಹೊರಟಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.