ಬಳ್ಳಾರಿ: ‘ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ಎಚ್ಐವಿ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸಲಹೆ ನೀಡಿದರು.
ನಗರದಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಸಿಯು ಏರ್ಪಡಿಸಿದ್ದ ವಿಶ್ವ ಏಡ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವುದು ಸಂತಸದ ವಿಚಾರ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ’ ಎಂದರು.
ಸನ್ಮಾನ: ಪರಿಣಾಮಕಾರಿ ಎಆರ್ಟಿ ಚಿಕಿತ್ಸೆ ನೀಡಿದ ಹೊಸಪೇಟೆ ಕೇಂದ್ರದ ಹಿರಿಯ ಆರೋಗ್ಯಾಧಿಕಾರಿ ಡಾ.ಮಹ್ಮದ್ ಯೂನುಸ್, ಪ್ರಯೋಗಾಲಯ ತಂತ್ರಜ್ಞೆ ಪುಸ್ಪಲತಾ, ಸ್ವಾಮಿ ವಿವೇಕಾನಂದ ರಕ್ತನಿಧಿಯ ಗೋಪಾಲರೆಡ್ಡಿ, ವಿಮ್ಸ್ ಐಸಿಟಿಸಿ ಕೇಂದ್ರದ ಜಯರಾಂ, ಆಪ್ತಸಮಾಲೋಚಕರಾದ ಜಿ.ಸಂತೋಷ್ ಮತ್ತು ವಿಮುಕ್ತಿ ಸಂಸ್ಥೆಯ ಅಧ್ಯಕ್ಷೆ ರತ್ನಮ್ಮ ಅವರನ್ನು ಇದೇ ಸಂದರ್ಭದಲ್ಲಿ ಗಣ್ಯರು ಸನ್ಮಾನಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಿವರಾಜ ಹೆಡೆ ಮಾತನಾಡಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ನಿಜಾಮುದ್ದೀನ್, ಏಡ್ಸ್ ನಿಯಂತ್ರಣ ಮತ್ತು ನಿರ್ವಹಣೆ ಘಟಕದ ಜಿಲ್ಲಾ ಮೇಲ್ವಿಚಾರಕ ಬಿ.ಗಿರೀಶ್, ಶುಶ್ರೂಷಕಿಯರ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಚವ್ಹಾಣ್, ನಿತ್ಯಜೀವನ ಸಂಸ್ಥೆಯ ಶ್ರೀನಿವಾಸ್ ವೇದಿಕೆಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.