ಬಳ್ಳಾರಿ: ಜಿಲ್ಲೆಯಲ್ಲಿ ಅತ್ಯಧಿಕ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಮುಂಜಾಗ್ರತೆ ಕ್ರಮಗಳನ್ನು ಮಂಗಳವಾರದಿಂದಲೇ ಕೈಗೊಂಡಿದ್ದು, ಎಲ್ಲ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದ್ದಾರೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರವೇ ಮಂಗಳವಾರ ಜಿಲ್ಲೆಯ ವಿವಿಧೆಡೆ ಬಿರುಗಾಳಿಯಿಂದ ಕೂಡಿದ ಭಾರಿ ಮಳೆ ಸುರಿದಿತ್ತು. ಬುಧವಾರವೂ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ. ಬೆಳೆ ನಷ್ಟವಾಗಿದೆ. ಹಲವೆಡೆ ಕೆರೆಗಳು ಕೋಡಿ ಬಿದ್ದಿವೆ. ಮನೆಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೆ ಹಾನಿಯಾಗಿದೆ.
ಜಂಟಿ ಸಮೀಕ್ಷೆ: ಮನೆ ಹಾಗೂ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆಯನ್ನೂ ತ್ವರಿತವಾಗಿ ನಡೆಸುವಂತೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಕುಲ್ ‘ಪ್ರಜವಾಣಿ’ಗೆ ಬುಧವಾರ ತಿಳಿಸಿದರು.
‘ಮಳೆ ನೀರು ಹೆಚ್ಚು ಹರಿಯುವ ಸ್ಥಳಗಳಿಂದ ವಾಸ ತೆರವುಗೊಳಿಸುವಂತೆ ಸೂಚಿಸಲಾಗಿದೆ. ತುಂಬಲಿರುವ ಮತ್ತು ತುಂಬಿರುವ ಹಳ್ಳ, ಕೆರೆಗಳ ಬಳಿ ಮುನ್ನೆಚ್ಚರಿಕೆ ವಹಿಸಲಾಗಿದೆ.ಹಾನಿಯಾದ ಮನೆಗಳಿರುವ ಪ್ರದೇಶಕ್ಕೂ ಭೇಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.
ಅಧಿಕ ಮಳೆ: ಜಿಲ್ಲೆಯಾದ್ಯಂತ ಅಕ್ಟೋಬರ್ ತಿಂಗಳಲ್ಲಿ ಇದುವರೆಗೆ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಐದು ದಿನಗಳಿಂದ ಜಿಲ್ಲೆಯ ಎಲ್ಲತಾಲ್ಲೂಕುಗಳಲ್ಲೂ ಮಳೆ ಸುರಿಯುತ್ತಿದೆ. ಸಂಡೂರಿನಲ್ಲಿ 9.60 ಸೆಂ.ಮೀ, ಹಡಗಲಿಯಲ್ಲಿ ಗರಿಷ್ಠ 6.14 ಸೆಂ.ಮೀ, ಕೊಟ್ಟೂರಿನಲ್ಲಿ 6.42 ಸೆಂ.ಮೀ ಮಳೆಯಾಗಿದೆ. ಉಳಿದ ತಾಲ್ಲೂಕುಗಳಲ್ಲಿ ಸರಾಸರಿ2ರಿಂದ 3 ಸೆಂ.ಮೀ ಮಳೆಯಾಗಿದೆ. ಪ್ರಸಕ್ತ ವಾರವೂ ಈ ತಾಲ್ಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುವ ನಿರೀಕ್ಷೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.