ADVERTISEMENT

ಆನೇಕಲ್‌ನಲ್ಲಿ ಹಾಲು ಪ್ಯಾಕಿಂಗ್ ಘಟಕ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2013, 9:41 IST
Last Updated 4 ಸೆಪ್ಟೆಂಬರ್ 2013, 9:41 IST

ಆನೇಕಲ್: ಆನೇಕಲ್‌ನಲ್ಲಿ ಹಾಲಿನ ಪ್ಯಾಕಿಂಗ್ ಘಟಕ ಸ್ಥಾಪಿಸಲು ಬೆಂಗಳೂರು ಹಾಲು ಒಕ್ಕೂಟವು ಸಿದ್ಧತೆ ನಡೆಸಿದೆ ಎಂದು ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್ ತಿಳಿಸಿದರು.

ತಾಲ್ಲೂಕಿನ ಚಂದಾಪುರದಲ್ಲಿ ಏರ್ಪಡಿಸಿದ್ದ ಆನೇಕಲ್ ತಾಲ್ಲೂಕು ಹಾಲು ಉತ್ಪಾದಕ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಪ್ರಾದೇಶಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆನೇಕಲ್ ಭಾಗದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದು ಬೇಡಿಕೆಯ ಪ್ರಮಾಣವೂ ಏರಿಕೆಯಾಗಿದೆ. ಇಲ್ಲಿ ಸಂಗ್ರಹಿಸಿದ ಹಾಲನ್ನು ಬೆಂಗಳೂರಿಗೆ ಕೊಂಡೊಯ್ದು ಪ್ಯಾಕಿಂಗ್ ಮಾಡಿ ಪುನಃ ವಾಪಸ್ ತರಬೇಕಾಗಿದೆ. ಇದರಿಂದ ಹೆಚ್ಚಿನ ವೆಚ್ಚವಾಗುತ್ತಿದೆ. ಇದಕ್ಕೆ ಬದಲಾಗಿ ಆನೇಕಲ್‌ನ್ನು ಕೇಂದ್ರವಾಗಿಟ್ಟುಕೊಂಡು ಪ್ಯಾಕಿಂಗ್ ಘಟಕ ಸ್ಥಾಪನೆ ಮಾಡಿ ವಿತರಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ' ಎಂದು ಅವರು ಮನವಿ ಮಾಡಿದರು.

`ಇತ್ತೀಚಿನ ದಿನಗಳಲ್ಲಿ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿದೆ. ಇದರಿಂದ ಒಕ್ಕೂಟದ ಆದಾಯಕ್ಕೆ ಹೊಡೆತ ಬೀಳುತ್ತಿದೆ. ಹಾಗಾಗಿ ರೈತರು ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿಕೊಂಡು ರಾಸುಗಳ ಪೋಷಣೆ ಮಾಡಿ ಗುಣಮಟ್ಟದ ಹಾಲನ್ನು ಉತ್ಪಾದನೆ ಮಾಡಬೇಕು ಈ ನಿಟ್ಟಿನಲ್ಲಿ ಸಹಕಾರ ಸಂಘಗಳು ರೈತರಿಗೆ ತರಬೇತಿ ಮಾರ್ಗದರ್ಶನ ನೀಡಬೇಕು' ಎಂದು ಅವರು ಸಲಹೆ ಮಾಡಿದರು. 
ಗುಣಮಟ್ಟದ ಹಾಲು ಪೂರೈಕೆ ಮಾಡಿದ ಸಹಕಾರ ಸಂಘಗಳಿಗೆ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಪ್ರೋತ್ಸಾಹ ಧನ ವಿತರಿಸಿದರು.

ಬೆಂಗಳೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗುರುಲಿಂಗಯ್ಯ, ವ್ಯವಸ್ಥಾಪಕ ನಟರಾಜ್, ಪ್ರಧಾನ ವ್ಯವಸ್ಥಾಪಕ ಕೃಷ್ಣಾರೆಡ್ಡಿ, ಉಪ ವ್ಯವಸ್ಥಾಪಕ ಬದರಿನಾಥ್, ನಾಗರಾಜು, ಎಸ್.ಕೆ.ನಿಂಗಪ್ಪ, ಜಗದೀಶ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.