ದೊಡ್ಡಬಳ್ಳಾಪುರ: ಚುನಾವಣೆ ಹಿನ್ನೆಲೆಯಲ್ಲಿ ಯಾರಾದರೂ ಕಾನೂನು ಸುವ್ಯವಸ್ಥೆಗೆ ಅಡ್ಡಿಯುಂಟು ಮಾಡಿದರೆ ಅಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಲ್ ಇನ್ಸ್ಪೆಕ್ಟರ್ ವಿ.ಶಿವಾರೆಡ್ಡಿ ಎಚ್ಚರಿಸಿದರು.
ಶುಕ್ರವಾರ ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚುನಾವಣಾ ನೀತಿ ಸಂಹಿತೆ ಪಾಲನೆಯಲ್ಲಿ ಚುನಾವಣ ಅಧಿಕಾರಿಗಳ ಆದೇಶವೇ ಅಂತಿಮವಾಗಿರುತ್ತದೆ. ಅವರು ಪ್ರತಿ ದಿನ ನೀಡುವ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಪಾಲನೆ ಕಡೆಗೆ ಎಲ್ಲ ರಾಜಕೀಯ ಪಕ್ಷಗಳು ಪ್ರಥಮ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ತಾಲ್ಲೂಕಿನಲ್ಲಿ ಚುನಾವಣಾ ಸಭೆ, ಸಮಾರಂಭ ನಡೆಸುವ ಬಗ್ಗೆ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ನಗರದ ಸಿದ್ದಲಿಂಗಯ್ಯ ವೃತ್ತ, ಸರ್ಕಾರಿ ಆಸ್ಪತ್ರೆ ವೃತ್ತ, ತಾಲ್ಲೂಕು ಕಚೇರಿ ವೃತ್ತ ಹಾಗೂ ಡಿಕ್ರಾಸ್ನಲ್ಲಿ ಯಾವುದೇ ರಾಜಕೀಯ ಪಕ್ಷ ಹಾಗೂ ಸಂಘಟನೆಗಳು ಸಭೆಗಳನ್ನು ನಡೆಸಲು ಅನುಮತಿ ನೀಡುವುದಿಲ್ಲ.ಚುನಾವಣಾ ಪ್ರಚಾರದ ವಾಹನ ಪರವಾನಗಿ, ಸಭೆ ಪೂರ್ವಾನುಮತಿ ಸೇರಿದಂತೆ ವಿವಿಧ ಪರವಾನಗಿಗಳನ್ನು ಪಡೆಯಲು ಪ್ರತಿ ರಾಜಕಿಯ ಪಕ್ಷಗಳವರೂ ಒಬ್ಬ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳುವುದು ಒಳಿತು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಜಿ.ಲಕ್ಷ್ಮೀಪತಿ, ಆರ್.ಚಂದ್ರತೇಜಸ್ವಿ, ವಡ್ಡರಹಳ್ಳಿ, ಟಿ.ಎನ್.ಪ್ರಭುದೇವ್, ಪ್ರಚಾರ ಸಭೆ, ವಾಹನ ಪರವಾನಿಗಿ ಸೇರಿದಂತೆ ನೀತಿ ಸಂಹಿತೆ ಪಾಲನೆಗೆ ಅನುಮತಿ ಪಡೆಯುವ ಎಲ್ಲಾ ವ್ಯವಸ್ಥೆಯನ್ನು ತಾಲ್ಲೂಕು ಕಚೇರಿಯಲ್ಲಿ ನೀಡಬೇಕು. ಒಂದೊಂದು ಅನುಮತಿಗೂ ಒಂದೊಂದು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಲು ನಗರದ ಭಗತ್ಸಿಂಗ್ ಕ್ರೀಡಾಂಗಣ ಬಳಕೆಗೆ ಅನುಮತಿ ನೀಡಬೇಕು ಎಂದು ಸಲಹೆಗಳನ್ನು ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಕೆ.ಬಿ.ಸಿದ್ದಲಿಂಗಯ್ಯ ಮಾತನಾಡಿ, ‘ಚುನಾವಣಾ ನೀತಿ ಸಂಹಿತೆ ಪಾಲನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಕೈಪಿಡಿಗಳನ್ನು ನೀಡಲಾಗುವುದು’ ಎಂದರು.
ಗ್ರಾಮಾಂತರ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ನವೀನ್ಕುಮಾರ್, ನಗರ ಠಾಣೆ ಅಪರಾಧ ವಿಭಾಗದ ಸಬ್ಇನ್ಸ್ಪೆಕ್ಟರ್ ಕೃಷ್ಣಕುಮಾರ್, ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ಬಿ.ಗಂಗರಾಜು, ನಗರ ಸಭೆಯ ಆರೋಗ್ಯ ನಿರೀಕ್ಷ ಸೂಲಪ್ಪ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.