ADVERTISEMENT

ನಾಲ್ಕು ಲಕ್ಷ ರೂಪಾಯಿ ಅನುದಾನ

​ಪ್ರಜಾವಾಣಿ ವಾರ್ತೆ
Published 9 ಜುಲೈ 2012, 5:10 IST
Last Updated 9 ಜುಲೈ 2012, 5:10 IST

ಆನೇಕಲ್: ಮಹಿಳೆಯರು ಹಾಲು ಉತ್ಪಾದಕ ಸಹಕಾರ ಸಂಘಗಳನ್ನು ಸ್ಥಾಪಿಸಿದರೆ ಒಕ್ಕೂಟದ ವತಿಯಿಂದ 4 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್ ನುಡಿದರು.

ಅವರು ತಾಲ್ಲೂಕಿನ ಹಾರಗದ್ದೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ವತಿಯಿಂದ ಮಹಿಳಾ ಸಹಕಾರ ಸಂಘಗಳು ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.

ಕೇಂದ್ರ ಸರ್ಕಾರದ ಸ್ಟೆಪ್ ಯೋಜನೆಯಡಿ ಮಹಿಳಾ ಸಹಕಾರ ಸಂಘದ ಸದಸ್ಯರಿಗೆ 75ಸಾವಿರ ರೂ. ಬಡ್ಡಿ ರಹಿತ ಸಾಲ ನೀಡಲಾಗುವುದು. ಹೈನುಗಾರಿಕೆ ಘಟಕಗಳನ್ನು ಸ್ಥಾಪನೆ ಮಾಡಲು 5 ಲಕ್ಷ ರೂಪಾಯಿ ಸಾಲ ನೀಡಲಾಗುವುದು.

ಸಾಮಾನ್ಯರಿಗೆ ಶೇ.25ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಶೇ.35ರಷ್ಟು ಸಹಾಯ ಧನ ನೀಡಲಾಗುವುದು. ಸರ್ಕಾರ ಹಾಗೂ ಒಕ್ಕೂಟವು ಹಲವು ಯೋಜನೆಗಳ ಮುಖಾಂತರ ಮಹಿಳೆಯರ ಬಲವರ್ಧನೆಗೆ ಸಹಾಯ ಮಾಡುತ್ತಿವೆ. ಇವುಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಹಕಾರ ಕ್ಷೇತ್ರದಲ್ಲಿ ಪ್ರತಿಯೊಬ್ಬ ಸದಸ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ಪರಸ್ಪರ ಗೌರವಗಳನ್ನು ಅಳವಡಿಸಿಕೊಂಡು ಸಹಕಾರಿ ತತ್ವದ ಮೂಲಕ ಅಭಿವೃದ್ಧಿ ಹೊಂದಬೇಕು ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್.ನಟರಾಜ್ ಮಾತನಾಡಿ, ಮಹಿಳೆಯರು ಮನಸ್ಸು ಮಾಡಿದರೆ ಎಂತಹ ಕ್ಲಿಷ್ಟ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಹೊಂದಿದ್ದಾರೆ. ರಾಜಕೀಯ ನಾಯಕತ್ವ ನೀಡುವ ಶಕ್ತಿಯೂ ಸಹ ಇದೆ ಎಂದರು.

ಇತ್ತೀಚಿನ ದಿನಗಳಲ್ಲಿ ರಾಜಕೀಯ ಕ್ಷೇತ್ರ ಸೇವಾ ಕ್ಷೇತ್ರವಾಗಿ ಉಳಿದಿಲ್ಲ. ವ್ಯಾಪಾರಿಕರಣವಾಗುತ್ತಿದೆ. ಮಹಿಳೆಯರು ಮನಸ್ಸು ಮಾಡಿ ಆತ್ಮ ಸಾಕ್ಷಿಯಂತೆ ಮತಚಲಾಯಿಸಿ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಸ್.ಬಸವರಾಜು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾದ ಎಚ್.ಆರ್.ಪ್ರಭಾಕರ್, ಜೆ.ಮಂಜುನಾಥ್, ಹಾರಗದ್ದೆ ವಿಎಸ್‌ಎಸ್‌ಎನ್ ಅಧ್ಯಕ್ಷ ಕೆ.ರಮೇಶ್, ಮೀನುಗಾರರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾ.ವೇ.ವೆಂಕಟೇಶ್, ಸೋಮಶೇಖರ್, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಪುರುಷೋತ್ತಮ್ ಮತ್ತಿತರರು ಹಾಜರಿದ್ದರು.

ನಬಾರ್ಡ್ ನಿವೃತ್ತ ಅಧಿಕಾರಿ ವೈ.ವಿ.ಗುಂಡೂರಾವ್ `ಸಂಘದ ಸರ್ವಾಂಗೀಣ ಬಲವರ್ಧನೆ~ ಎಂಬ ವಿಷಯವಾಗಿ ಉಪನ್ಯಾಸ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.