ADVERTISEMENT

ಪರಿಸರ ಸಂರಕ್ಷಣೆ ಕಾರ್ಯಕ್ರಮ ವಿಸ್ತಾರಗೊಳ್ಳಲಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2011, 19:30 IST
Last Updated 7 ಸೆಪ್ಟೆಂಬರ್ 2011, 19:30 IST

ಆನೇಕಲ್: ಪರಿಸರ ಸಂರಕ್ಷಣೆ ಇಂದಿನ ದಿನಗಳಲ್ಲಿ ಅತ್ಯಂತ ಅವಶ್ಯಕವಾಗಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಶಾಲಾ ಕಾಲೇಜುಗಳಲ್ಲಿ ಆರಂಭವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಟಿ.ದಯಾನಂದರೆಡ್ಡಿ ನುಡಿದರು.

ಅವರು ಪಟ್ಟಣದ ಡಾ.ಎಸ್.ಗೋಪಾಲರಾಜು ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಸರ ಸಂಘದ ವತಿಯಿಂದ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.ಜಾಗತಿಕ ತಾಪಮಾನ ಹೆಚ್ಚಳದಿಂದಾಗಿ ಹವಾಮಾನದಲ್ಲಿ ಏರುಪೇರಾಗುತ್ತಿದೆ. ನಗರೀಕರಣದ ಪ್ರಭಾವದಿಂದಾಗಿ ಗಿಡಮರಗಳು ನಾಶವಾಗಿವೆ. ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು.

ರಸ್ತೆ ಅಗಲೀಕರಣಕ್ಕಾಗಿ ಆನೇಕಲ್ ಚಂದಾಪುರ ರಸ್ತೆಯಲ್ಲಿ ಬೃಹದಾಕಾರದ ಮರಗಳಿಗೆ ಕೊಡಲಿ ಪೆಟ್ಟು ಬೀಳುತ್ತಿದೆ. ಮರಗಳನ್ನು ಕಡಿಯುವುದಕ್ಕೆ ಪರ್ಯಾಯವಾಗಿ ರಸ್ತೆಯ ಉದ್ದಕ್ಕೂ ಕಡ್ಡಾಯವಾಗಿ ಗಿಡಗಳನ್ನು ನೆಡುವತ್ತ ಅರಣ್ಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದರು.

ತಮ್ಮ ಸಂಸ್ಥೆ ವತಿಯಿಂದ 1500 ವಿದ್ಯಾರ್ಥಿಗಳನ್ನು ದತ್ತು ಪಡೆದಿದ್ದು ಎಲ್ಲಾ ವಿದ್ಯಾರ್ಥಿಗಳಿಗೂ ಗಿಡಗಳನ್ನು ನೆಡಲು ಉಚಿತವಾಗಿ ಸಸಿಗಳನ್ನು ನೀಡಲಾಗಿದೆ. ಪರಿಸರ ಸಂರಕ್ಷಣೆಯ ಯಾವುದೇ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಪೊಲೀಸ್ ಅಧಿಕಾರಿ ಎಲ್.ವೈ.ರಾಜೇಶ್ ಮಾತನಾಡಿ ವಿದ್ಯಾರ್ಥಿಗಳು ಸಾಧಿಸಬೇಕೆಂಬ ಛಲವನ್ನು ಹೊಂದಿರಬೇಕು. ಸಮಾಜದಲ್ಲಿನ ಪಿಡುಗುಗಳನ್ನು ನಿವಾರಣೆ ಮಾಡಲು ಸಂಕಲ್ಪ ಮಾಡಬೇಕು. ಪರಿಸರ ಸಂರಕ್ಷಣೆ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು. ಅಲೆಕ್ಸಾಂಡರ್ ಮಾದರಿಯಲ್ಲಿ ಮಹತ್ವಾಕಾಂಕ್ಷೆಯನ್ನು ಹೊಂದಿರಬೇಕು. ಶಿವಾಜಿ, ವಿವೇಕಾನಂದರ ಆದರ್ಶಗಳನ್ನು ಅನುಸರಿಸಬೇಕು ಎಂದರು.

ವಿದ್ಯಾರ್ಥಿಗಳು ಪಟ್ಟಣದಲ್ಲಿ ಸೈಕಲ್ ಜಾಥಾ ನಡೆಸಿ ಪರಿಸರ ಸಂರಕ್ಷಣೆಯ ಘೋಷಣೆಗಳನ್ನು ಕೂಗಿದರು. ಕಾಲೇಜು ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳಿಗೆ ಉಚಿತವಾಗಿ ಗಿಡಗಳನ್ನು ನೀಡಲಾಯಿತು.

ಡಾ.ಗೋಪಾಲರಾಜು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಎಸ್‌ಬಿ ಪದವಿ ಪೂರ್ವ ಕಾಲೇಜು, ವಿಶ್ವಚೇತನ ಕಾಲೇಜು, ಸಂತ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಕಾಲೇಜಿನ ಪ್ರಾಚಾರ್ಯರಾದ ಡಾ.ವಿದ್ಯಾ.ಎಸ್.ನಾಯಕ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆಂಪರಾಜು, ಯುವ ಕಾಂಗ್ರೆಸ್ ಮುಖಂಡ ಕೇಶವ, ಬಿ.ಪಿ.ರಮೇಶ್, ಬಿಜೆಪಿ ಮುಖಂಡ ಪಿ.ರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.