ADVERTISEMENT

ಮಾದಿಗ ಸಮುದಾಯಕ್ಕೆ ಟಿಕೆಟ್‌ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 10:05 IST
Last Updated 17 ಮಾರ್ಚ್ 2018, 10:05 IST

ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಮೀಸಲು ಕ್ಷೇತ್ರಕ್ಕೆ ಈ ಬಾರಿ ಮಾದಿಗ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಪುರಸಭೆ ಅಧ್ಯಕ್ಷ ಎಂ.ಮೂರ್ತಿ ಆಗ್ರಹಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ ನಂತರ ದೇವನಹಳ್ಳಿ ಪುರಸಭೆ ಕಚೇರಿಯಲ್ಲಿ ಅವರು ಮಾತನಾಡಿದರು.

ನಾಲ್ಕು ಬಾರಿ ಛಲವಾದಿ ಸಮುದಾಯಕ್ಕೆ ಮತ್ತು ಎರಡು ಬಾರಿ ಭೋವಿ ಸಮುದಾಯಕ್ಕೆ ಪಕ್ಷ ಅವಕಾಶ ಮಾಡಿಕೊಟ್ಟಿದೆ. ಕಾಂಗ್ರೆಸ್ ಪಕ್ಷದಲ್ಲಿ ಈ ಕ್ಷೇತ್ರದಲ್ಲಿ ಈವರೆಗೂ ಮಾದಿಗ ಸಮುದಾಯವನ್ನು ಪರಿಗಣಿಸಿಲ್ಲ. ಪರಿಶಿಷ್ಟ ಜಾತಿಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಸಮುದಾ
ಯವನ್ನು ಯಾವ ಕಾರಣಕ್ಕೆ ನಿರ್ಲಕ್ಷಿಸಲಾಗುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು.

ADVERTISEMENT

‘ಪ್ರಸ್ತುತ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿತರಾಗಿರುವ ಚಂದೇನಹಳ್ಳಿ ಮುನಿಯಪ್ಪ ಮತ್ತು ಎಂ. ನಾರಾಯಣಸ್ವಾಮಿ ಜನತಾ ಪರಿವಾರದಿಂದ ಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮಾದಿಗ ಸಮುದಾಯದಲ್ಲಿ ಮೂಲ ಕಾಂಗ್ರೆಸ್ ಪಕ್ಷದವರ ಪಟ್ಟಿಯಲ್ಲಿ ನಾನೇ ಮುಂಚೂಣಿಯಲ್ಲಿದ್ದೇನೆ. 27 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿಯುತ್ತಿದ್ದೇನೆ. ಪುರಸಭೆ ಸದಸ್ಯನಾಗಿ, ಪ್ರಸ್ತುತ ಪುರಸಭೆ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ’ ಎಂದರು.

ಪಕ್ಷದಲ್ಲಿ ಆಕಾಂಕ್ಷಿತರ ಪಟ್ಟಿ ಬೆಳೆಯುತ್ತಲೇ ಇದೆ. ರಾಜ್ಯ ಸರ್ಕಾರದ ಸಾಧನೆ ಮತದಾರರಿಗೆ ತೃಪ್ತಿ ತಂದಿದೆ. ಎಲ್ಲ ಸಮುದಾಯಕ್ಕೆ ಸರ್ಕಾರದಲ್ಲಿ ಆದ್ಯತೆ ನೀಡಲಾಗುತ್ತಿದೆ. ಮಾದಿಗ ಅಭಿವೃದ್ಧಿ ನಿಗಮ ಮಂಡಳಿಗೆ ಅಸ್ತು ಎಂದಿದೆ.

ವಿಧಾನಸಭಾ ಚುನಾವಣೆಯಲ್ಲಿ ಜಾತಿ ಸಮೀಕರಣದ ಲೆಕ್ಕಾಚಾರದಲ್ಲಿ ಟಿಕೆಟ್ ನೀಡಿಕೆ ಅನಿವಾರ್ಯವಾಗಿರುವುದರಿಂದ ಮಾದಿಗ ಸಮುದಾಯಕ್ಕೆ ಅವಕಾಶ ನೀಡಿದರೆ ಕ್ಷೇತ್ರದಲ್ಲಿ ಗೆಲುವು ಸುಲಭವಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.