ADVERTISEMENT

ರಾಜಕಾರಣಕ್ಕೆ ಘನತೆ ತಂದುಕೊಟ್ಟವರು ಅರಸು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2012, 5:40 IST
Last Updated 23 ಆಗಸ್ಟ್ 2012, 5:40 IST

ದೊಡ್ಡಬಳ್ಳಾಪುರ: ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಮೂಲಕ ರಾಜಕಾರಣಕ್ಕೆ ಘನತೆ ತಂದುಕೊಟ್ಟ ಕೀರ್ತಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯಕ್ಕೆ ಉತ್ತಮ ಆಡಳಿತ ನೀಡಿದ್ದ ಅರಸು ಅವರ ಆಡಳಿತ ವೈಖರಿ ಸದಾ ಕಾಲ ಸ್ಮರಣೀಯ. ಅಂತೆಯೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸಹ ಈ ದೇಶ ಕಂಡ ಉತ್ತಮ ಪ್ರಧಾನಿಯಾಗಿ ದೇಶವನ್ನು ಆಧುನಿಕತೆ ಕಡೆಗೆ ಮುನ್ನಡೆಸಿದ ನಾಯಕ. ಈ ಮಹನೀಯರ ಸಾಧನೆಗಳನ್ನು ನಾವು ಸದಾ ಸ್ಮರಿಸಬೇಕಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ ಮಾತನಾಡಿ, ರಾಜೀವ್ ಗಾಂಧಿಯವರ ದೂರದಷ್ಟಿ ಮತ್ತು ಅವರ ಪ್ರಗತಿಪರ ಚಿಂತನೆ ಅಳವಡಿಸಿಕೊಂಡರೆ ದೇಶ ಪ್ರಗತಿ ಪಥದಲ್ಲಿ ಮುನ್ನಡೆಯುವಲ್ಲಿ ಸಂಶಯ ಇಲ್ಲ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ರಾಜ್‌ಕುಮಾರ್, ಕಾಂಗ್ರೆಸ್ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ತಿ.ರಂಗರಾಜು, ಕಾರ್ಯದರ್ಶಿ ಡಿ.ವಿ.ಅಶ್ವತ್ಥಪ್ಪ, ಕಾಂಗ್ರೆಸ್ ಮುಖಂಡರಾದ ಜವಾಜಿ ಸೀತಾರಾಂ, ಗಂಗಾಧರಯ್ಯ, ರಮೇಶ್, ಕೆ.ಎಸ್.ರವಿ, ಅಶೋಕ್, ಕೆಂಪೇಗೌಡ, ಯುವ ಕಾಂಗ್ರೆಸ್ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ನಾಗೇಶ್, ಎನ್. ಆಂಜನಮೂರ್ತಿ, ಬಿ.ಮುನಿರಾಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.