ADVERTISEMENT

ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ನಾಳೆಯಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 3:30 IST
Last Updated 1 ಅಕ್ಟೋಬರ್ 2012, 3:30 IST

ದೊಡ್ಡಬಳ್ಳಾಪುರ: ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಗೆ ಆಗ್ರಹಿಸಿ ಅಕ್ಟೋಬರ್ 2 ರಿಂದ ಚಿಕ್ಕಬಳ್ಳಾಪುರ ಪಟ್ಟಣದ ಶಿಡ್ಲಘಟ್ಟ ವೃತ್ತದ್ಲ್ಲಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳ್ಲ್ಲಲಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ವತಿಯಿಂದ ನಡೆದ ಜಾಗೃತಿ ಕಾರ್ಯಕ್ರಮದ್ಲ್ಲಲಿ ಭಾಗವಹಿಸಿ ಅವರು ಮಾತನಾಡಿದರು. 

ಸರ್ಕಾರ ಎತ್ತಿನ ಹೊಳೆ ಯೋಜನೆಯನ್ನು ತರಾತುರಿಯಲ್ಲಿ ಜಾರಿಗೊಳಿಸಬಾರದು. ಲಕ್ಷಾಂತರ ಜನರ ಹಿತದೃಷ್ಟಿಯಿಂದ ತಾಂತ್ರಿಕ ತಜ್ಞರ ಸಮಿತಿಯನ್ನು ರಚಿಸಿ ಈ ಯೋಜನೆಯ ಸಾಧಕ ಬಾಧಕಗಳನ್ನು ಪರಿಶೀಲಿಸಬೇಕು.
 
ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಅವರ ವರದಿ ಆಧಾರಿತ ಶಾಶ್ವತ ನೀರಾವರಿ ಯೋಜನೆಯ ಅನುಷ್ಠಾನದಲ್ಲಿ ಆಗುತ್ತಿರುವ ಅನಗತ್ಯ ವಿಳಂಬವನ್ನು ತಡೆಯಲು ತಾಂತ್ರಿಕ ತಜ್ಞರ, ಜನಪ್ರತಿನಿಧಿಗಳ ಮತ್ತು ಹೋರಾಟಗಾರರ ಉಸ್ತುವಾರಿ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದರು.

ತೀವ್ರ ಅಂತರ್ಜಲ ಕುಸಿತದಿಂದ ತತ್ತರಿಸುತ್ತಿರುವ ಮತ್ತು ಅನೇಕ ವರ್ಷಗಳಿಂದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ದಿವ್ಯ ನಿರ್ಲಕ್ಷ್ಯಕ್ಕೊಳಗಾಗಿರುವ ಬಯಲು ಸೀಮೆ ಜಿಲ್ಲೆಗಳನ್ನು ಸಂವಿಧಾನದ 371 ಕಲಂ ಅಡಿ ವಿಶೇಷ ವಲಯ ಎಂದು ಘೋಷಿಸಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಕೆರೆಗಳು, ಸಾವಿರಾರು ತೆರೆದ ಬಾವಿಗಳು ಹಾಗೂ ಕೊಳವೆ ಬಾವಿಗಳನ್ನು ಪುನರುಜ್ಜೀವಗೊಳಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸರ್ಕಾರ ಮುಂದಾಗಬೇಕು. ಕೆರೆಗಳಿಗೆ ನೀರು ಹರಿಯುವಿಕೆಯ ಮೂಲವಾದ ರಾಜಕಾಲುವೆ ಮತ್ತು ಸಂಪರ್ಕ ಕಾಲುವೆಗಳ ಒತ್ತುವರಿಗಳನ್ನು ತೆರವುಗೊಳಿಸಿ ಅವುಗಳನ್ನು ಪುನಶ್ಚೇತನಗೊಳಿಸಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಓಬದೇವನಹಳ್ಳಿ ಮುನಿಯಪ್ಪ, ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ಭೂ ನ್ಯಾಯ ಮಂಡಲಿ ಸದಸ್ಯ ಆರ್.ಸಿ.ರಾಮಲಿಂಗಯ್ಯ, ರಾಜ್ಯ ರೈತಸಂಘದ ಅಧ್ಯಕ್ಷ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ಮುತ್ತೇಗೌಡ, ಸತೀಶ್, ಮುನಿರಾಜು ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.