ದೇವನಹಳ್ಳಿ: ರಸ್ತೆಗುಂಡಿಯಿಂದಾಗಿ ಸಂಭವಿಸುತ್ತಿರುವ ಅಪಘಾತಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇರ ಹೊಣೆ ಎಂದು ಶಾಸಕ ಪಿಳ್ಳಮುನಿ ಶಾಮಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದರು.
ದೇವನಹಳ್ಳಿ ನಗರದ ಜೆಡಿಎಸ್ ಕಚೇರಿಯಲ್ಲಿ ರಸ್ತೆಯಲ್ಲಿನ ಗುಂಡಿಯಿಂದಾಗಿ ದಿನನಿತ್ಯ ಆಗುತ್ತಿರುವ ಅಪಘಾತ ಮತ್ತು ಶೆಟ್ಟರಹಳ್ಳಿ ಗೇಟ್ ಬಳಿ ಯುವತಿ ವೀಣಾ ಮೃತಪಟ್ಟ ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ ಅವರು, ಗುಂಡಿ ಮುಚ್ಚುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದರೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ದೂರಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಮತ್ತು ಸಂಸದ ಡಾ.ಎಂ.ವೀರಪ್ಪ ಮೊಯಿಲಿ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಮೇಲೆ ಒತ್ತಡ ತರಬೇಕು. ಪ್ರತಿಯೊಂದಕ್ಕೂ ಶಾಸಕರನ್ನು ಬೊಟ್ಟು ಮಾಡಿದರೆ ಹೇಗೆ ಎಂದು ಅವರು ಪ್ರಶ್ನಿಸಿದರು. ಜೆಡಿಎಸ್ ತಾಲ್ಲೂಕು ಘಟಕ ಅಧ್ಯಕ್ಷ ಬಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಜಿ.ವಿ.ರವೀಂದ್ರ, ಪುರಸಭೆ ಅಧ್ಯಕ್ಷ ನರಸಿಂಹಮೂರ್ತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.