ADVERTISEMENT

‘ಕಾಂಗ್ರೆಸ್‌ ಗೆಲುವಿಗೆ ಜನ‍ಪರ ಯೋಜನೆ ಕಾರಣ’

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 9:07 IST
Last Updated 9 ಫೆಬ್ರುವರಿ 2018, 9:07 IST

ವಿಜಯಪುರ: ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಾಧ್ಯವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಮುನಿನರಸಿಂಹಯ್ಯ ಹೇಳಿದರು.

ಹೋಬಳಿಯ ಕೋರಮಂಗಲ ಗ್ರಾಮದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಶುಭಕೋರಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ, ಕ್ಷೀರಭಾಗ್ಯ ಯೋಜನೆ, ವಿದ್ಯಾಸಿರಿ ಯೋಜನೆ, ರೈತರ ಸಾಲ ಮನ್ನಾ, ಮನಸ್ವಿನಿ ಯೋಜನೆ, ಶಾದಿ ಭಾಗ್ಯ ಯೋಜನೆ, ಸೇರಿದಂತೆ ಹಲವಾರು ಯೋಜನೆಗಳು ಜನರಿಗೆ ಅನುಕೂಲವಾಗಿದೆ ಎಂದರು.

ಯಾವುದೇ ಪಕ್ಷಗಳು ಬೆಳವಣಿಗೆಯಾಗಬೇಕಾದರೂ ತಳಪಾಯವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದಾಗ ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಸಂಘಟನೆಗೆ ಮುಂದಾಗಬೇಕು ಎಂದರು.

ADVERTISEMENT

ಕಾಂಗ್ರೆಸ್ ಮುಖಂಡ ಚಿನ್ನಪ್ಪ ಮಾತನಾಡಿ, ಕೋರಮಂಗಲ ಗ್ರಾಮ ಪಂಚಾಯಿತಿ, ಹಾಗೂ ಹಾರೋಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿ, ಸ್ಥಳೀಯ ಜನರ ಆಶೋತ್ತರಗಳಿಗೆ ಅನುಗುಣವಾಗಿ ಕೆಲಸ ಮಾಡಲಿದ್ದಾರೆ.

ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಸಿ.ಸಿ. ರಸ್ತೆಗಳು ನಿರ್ಮಾಣ ಮಾಡಿದ್ದೇವೆ, ಶುದ್ಧ ಕುಡಿಯುವ ನೀರು ಪೂರೈಕೆ ಮಾಡಿದ್ದೇವೆ, ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಲಾಗಿದ್ದು, ಜನರು ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಿದರೆ, ಮತ್ತಷ್ಟು ಪರಿಣಾಮಕಾರಿಯಾಗಿ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ ಎಂದರು.

ವಿಜಯಪುರ ಬ್ಲಾಕ್ ಎಸ್.ಸಿ. ಘಟಕದ ಅಧ್ಯಕ್ಷ ಮುದುಗುರ್ಕಿ ನಾರಾಯಣಸ್ವಾಮಿ ಮಾತನಾಡಿ, ಸ್ಥಳೀಯ ಚುನಾವಣೆಗಳು ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗುತ್ತವೆ. ಪಕ್ಷದ ಕಾರ್ಯಕರ್ತರು, ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕು ಎಂದರು.

ಸ್ಥಳೀಯ ಮುಖಂಡರಾದ ಪಿಳ್ಳರಾಜು, ಕೃಷ್ಣಪ್ಪ, ಗೋಪಾಲಕೃಷ್ಣ, ಪ್ರಕಾಶ್, ಹನುಮಪ್ಪ, ಆಂಜಿನಪ್ಪ, ಮುನಿರಾಜು, ಧನಂಜಯ.ಎಚ್, ಗೋವಿಂದಮ್ಮ, ಲಕ್ಷ್ಮಮ್ಮ, ಹರೀಶ್ ಕುಮಾರ್, ನವೀನ್ ಕುಮಾರ್, ಮುನಿರಾಜು, ಎನ್.ತಿಲಕ್ ಕುಮಾರ್, ರಾಮಕ್ಕ, ಮುನಿಕೃಷ್ಣಪ್ಪ, ರೂಪ, ಕನಕರತ್ನಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.