ದೇವನಹಳ್ಳಿ : ತಾಲ್ಲೂಕು ವ್ಯಾಪ್ತಿಯಲ್ಲಿ ವಿವಿಧೆಡೆ 6ಚೆಕ್ ಡ್ಯಾಂ ನಿರ್ಮಾಣಕ್ಕೆ ₹ 2.4ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.
ತಾಲ್ಲೂಕು ವಿಶ್ವನಾಥಪುರ ಗ್ರಾಮದ ಬಳಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ₹40 ಲಕ್ಷ ವೆಚ್ಚದ ಚೆಕ್ ಡ್ಯಾಂಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಬಿದಲೂರು, ಹೊಲೇರಹಳ್ಳಿ, ಐಬಸಾಪುರ, ಚೌಡಪ್ಪನಹಳ್ಳಿ, ಚಿಕ್ಕತತ್ತಮಂಗಲ ಗ್ರಾಮಗಳ ಸರಹದ್ದಿನಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದರಿಂದ ಅಂತರ್ಜಲವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಈ ವರ್ಷ ಉತ್ತಮ ಮಳೆಯಾಗಿದ್ದರೂ, ತಾಲ್ಲೂಕಿನ ಬಹುತೇಕ ಕೆರೆಗಳು ಕೋಡಿ ಹರಿದಿಲ್ಲ. ನೀರು ಹರಿಯುವ ಮಾರ್ಗಗಳ ನಿರ್ವಹಣೆ ಸಮರ್ಪಕವಾಗಿಲ್ಲ. ನದಿ ಮೂಲಗಳಿಲ್ಲದೆ ಬಯಲು ಸೀಮೆ ಪ್ರದೇಶ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. 15 ವರ್ಷಗಳ ಹಿಂದೆ ಅಂತರ್ಜಲ ಕುಸಿತ ಕಂಡಿರುವುದರಿಂದ ಕೊಳವೆಬಾವಿ ಕೊರೆಯದಂತೆ ಸರ್ಕಾರ ಕಪ್ಪು ಪಟ್ಟಿಗೆ ಸೇರಿಸಿದೆ ಎಂದರು.
ಸರ್ಕಾರದ ಸಮೀಕ್ಷೆಯಲ್ಲಿ ರಾಜ್ಯದ 32 ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಅಂತರ್ಜಲ ಬಳಕೆ ಎಂಬ ಹಣೆ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಾಲ್ಕು ತಾಲ್ಲೂಕುಗಳು ಸೇರ್ಪಡೆಯಾಗಿವೆ. ನಾಗರಿಕರು ಅಮೂಲ್ಯವಾದ ಜೀವಜಲ, ಪರಿಸರ ಸಂರಕ್ಷಣೆ ಉಳಿಸುವ ಪ್ರಯತ್ನ ಮಾಡಬೇಕು ಎಂದರು.
ವ್ಯವಸಾಯ ಮಾರುಕಟ್ಟೆ ಸಮಿತಿ ನಿರ್ದೇಶಕ ಕೆ.ವಿ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಶೈಲಜಾ ಜಗದೀಶ್, ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಶಿವರಾಮಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಮೂರ್ತಿ, ಉಪಾಧ್ಯಕ್ಷೆ ರಮಾದೇವಿ, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣಸ್ವಾಮಿ, ಮುಖಂಡರಾದ ಲಕ್ಷ್ಮಣ್, ಚಂದ್ರೇಗೌಡ, ಮುನೇಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.