ಮಾಗಡಿ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಹೆಣ್ಣುಭ್ರೂಣ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸರ್ಕಾರಿ ಆಸ್ಪತ್ರೆಯಲ್ಲಿನ ಸ್ಕ್ಯಾನಿಂಗ್ ಕೊಠಡಿ, ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದ ಬೆಂಗಳೂರಿನ ಪಿಡಿಆರ್ಸಿಎಚ್ ಯೋಜನಾ ನಿರ್ದೇಶಕ ಡಾ.ಶ್ರೀನಿವಾಸ್ ಮಾತನಾಡಿ, ಜುಲೈ 8ರಂದು ಮೂರು ಅಥವಾ ನಾಲ್ಕು ತಿಂಗಳ ಹೆಣ್ಣು ಭ್ರೂಣವನ್ನು ಸರ್ಕಾರಿ ಆಸ್ಪತ್ರೆ ಕಾಂಪೌಂಡ್ನಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪರಿಶೀಲನೆ ಕೈಗೊಳ್ಳಲಾಗಿದೆ. ಆಸ್ಪತ್ರೆ ಆವರಣಕ್ಕೆ ಹೊರಗಿನಿಂದ ಭ್ರೂಣ ತಂದು ಎಸೆದಿದ್ದಾರೋ ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿಯೇ ನಡೆದಿದೆಯೋ ಎರಡು ಆಯಾಮದಲ್ಲಿ ತನಿಖೆ ನಡೆದಿದೆ ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿರುವ ಮತ್ತು ತಪಾಸಣೆ ಮಾಡಿಸಿಕೊಂಡಿರುವ ಗರ್ಭಿಣಿಯರನ್ನು ಗುರುತಿಸಿ ಮಾಹಿತಿ ಸಂಗ್ರಹಿಸುವಂತೆ ಆಶಾ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಪಟ್ಟಣದ ಧರ್ಮಸ್ಥಳ ಮಂಜುನಾಥ ಆಸ್ಪತ್ರೆ ಮತ್ತು ದಿವ್ಯ ಆಸ್ಪತ್ರೆಗಳಿಗೆ ತಂಡ ಭೇಟಿ ನೀಡಿ ಪರಿಶೀಲಿಸಿದ್ದು, ಸೂಕ್ತ ದಾಖಲೆಗಳು ಲಭಿಸದ ಕಾರಣ ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳನ್ನು ಮುಚ್ಚಿಸಲಾಗಿದೆ. ಹೆಣ್ಣುಭ್ರೂಣ ಪತ್ತೆ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.
ತನಿಖಾ ತಂಡದಲ್ಲಿ ಪಿಸಿಪಿಎನ್ ಡಿಟಿ ಉಪನಿರ್ದೇಶಕ ಡಾ.ವಿವೇಕದೊರೆ, ಮಕ್ಕಳ ಮತ್ತು ಲಸಿಕಾ ಕಾರ್ಯಕ್ರಮದ ಉಪನಿರ್ದೇಶಕಿ ಡಾ.ರಜನಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕಾಂತರಾಜು, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಅಧಿಕಾರಿ ಡಾ.ರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್.ಎಂ.ಸಿ, ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತುಕಾರಾಂ, ತಾಲ್ಲೂಕು ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ರಂಗನಾಥ್ ಹಾಗೂ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.