ಹೊಸಕೋಟೆ: ರಾಜ್ಯ ಬಜೆಟ್ನಲ್ಲಿ ಐದು ಸಾವಿರ ವಸತಿರಹಿತ ಪೌರ ಕಾರ್ಮಿಕರಿಗೆ ₹ 300 ಕೋಟಿ ವೆಚ್ಚದಡಿ ಮನೆಗಳನ್ನು ನಿರ್ಮಿಸಲು ಉದ್ದೇಶಿಸಿರುವ ಪೌರ ಆಸರೆ ಯೋಜನೆಯು ಅತೀವ ಸಂತೋಷ ತಂದಿದೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್
ತಿಳಿಸಿದ್ದಾರೆ.
ಕೆಎಸ್ಎಸ್ಐಡಿಸಿಯಿಂದ ಉತ್ತರ ಕನ್ನಡ ಜಿಲ್ಲೆಯ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ಕಲಬುರ್ಗಿಯ ಚಿತ್ತಾಪುರ, ತುಮಕೂರಿನ ಬೈರಗೊಂಡನಹಳ್ಳಿ-ಚಿಕ್ಕನಾಯಕನಹಳ್ಳಿ, ಬೀದರ್ನ ಹುಮನಾಬಾದ್, ರಾಯಚೂರು ಗ್ರಾಮಾಂತರ, ವಿಜಯಪುರದ ಹೂವಿನ ಹಿಪ್ಪರಗಿ ಮತ್ತು ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು ಸ್ಥಾಪಿಸುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಆಯವ್ಯಯದಲ್ಲಿ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ. ಉದ್ಯೋಗಾವಕಾಶ ಮತ್ತು ಆರ್ಥಿಕ ಬೆಳವಣಿಗೆಗೆ ನೆರವಾಗಲಿದೆ ಎಂದು
ಹೇಳಿದ್ದಾರೆ.
ಬಜೆಟ್ನಲ್ಲಿ ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿ ಹೆಚ್ಚಿಸಿದ್ದಾರೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಆಹಾರ ಧಾನ್ಯ ಖರೀದಿಸಲು ₹ 3,500 ಕೋಟಿಯನ್ನು ಆವರ್ತ ನಿಧಿಗೆ ಒದಗಿಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಅತಿಹೆಚ್ಚಿನ ಗಾತ್ರದ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿ ಸ್ಥಾಪಿಸಿದ ಕೀರ್ತಿ ಮುಖ್ಯಮಂತ್ರಿಗೆ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.