ಆನೇಕಲ್: ‘ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಿದೆ’ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.
ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಉದ್ಘಾಟನೆ ನೆರವೇರಿಸಿಅವರು ಮಾತನಾಡಿದರು.
ಮಹಿಳಾ ಸಂಘಗಳಲ್ಲಿ ಬ್ಯಾಂಕಿಂಗ್ ವ್ಯವಹಾರ, ‘ಸಣ್ಣ ಉಳಿತಾಯ ಕುರಿತು ಅರಿವು ಮೂಡಿಸುವಲ್ಲಿ ಉತ್ತಮ ಪ್ರಯತ್ನಗಳಾಗಿದೆ. ಕೆರೆಗಳ ಪುನಶ್ಚೇತನ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವೃದ್ಧರಿಗೆ ವೃದ್ಧಾಪ್ಯ ವೇತನ ಸೇರಿದಂತೆ ಹಲವಾರು ಕಾರ್ಯಕ್ರಮಗಳ ಮೂಲಕ ಸಮಾಜಕ್ಕೆ ಕೊಡುಗೆ ನೀಡಲಾಗಿದೆ. ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳು ಸಕ್ರಿಯವಾಗಿ ತೊಡಗಿಸಿಕೊಂಡು ಕೊಡುಗೆ ನೀಡಿದರೆ ಸಮಾಜದ ಎಲ್ಲರ ಅಭಿವೃದ್ಧಿ ಸಾಧ್ಯ. ಶಿಕ್ಷಣ, ಆರೋಗ್ಯ, ಕೌಶಲಾಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಬೇಕು’ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಸತೀಶ್ ನಾಯ್ಕ ಮಾತನಾಡಿ ಸರ್ಕಾರದ ಯೋಜನೆಗಳು ಮತ್ತು ಸಂಸ್ಥೆಗಳು ಕೈಗೊಳ್ಳುವ ಕಾರ್ಯಕ್ರಮಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕೆಂಬ ಉದ್ದೇಶದಿಂದ ಯೋಜನೆ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ಸ್ವಸಹಾಯ ಗುಂಪುಗಳ ರಚನೆ, ಸಾಲ ಸೌಲಭ್ಯ, ಪರಿಸರ ಸಂರಕ್ಷಣೆ, ಕೌಶಲಾಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.
ಹೆಬ್ಬಗೋಡಿ ನಗರಸಭೆ ಆಯುಕ್ತ ಚೆನ್ನರಾಯಪ್ಪ, ಸದಸ್ಯರಾದ ಶ್ರೀನಿವಾಸರೆಡ್ಡಿ, ಪದ್ಮರಾಜಣ್ಣ, ಮಂಜುನಾಥ್ರೆಡ್ಡಿ, ತಿಪ್ಪೇಸ್ವಾಮಿ, ಸುಬ್ರಮಣ್ಯ, ಮುನಿಕೃಷ್ಣ, ಹೆಬ್ಬಗೋಡಿ ಪೊಲೀಸ್ ಠಾಣೆಯ ಸಿಪಿಐ ಬಿ.ಕೆ.ಶೇಖರ್, ಮುಖಂಡರಾದ ಟಿ.ಎಂ.ಪ್ರಭಾಕರರೆಡ್ಡಿ, ರಾಜೇಶ್ ನಾಯ್ಕ, ತಾಲ್ಲೂಕು ಯೋಜನಾಧಿಕಾರಿ ಕೆ.ಯಶೋಧರ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.