
ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ₹29 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ಮಂಗಳವಾರ ನಡೆದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರತಿ ವರ್ಷ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಭಕ್ತರು ಬರುತ್ತಾರೆ. ಕ್ಷೇತ್ರದಲ್ಲಿ ₹16 ಕೋಟಿ ವೆಚ್ಚದಲ್ಲಿ ಎರಡು ಸಾವಿರ ಭಕ್ತರು ಒಂದೇ ಸಮಯದಲ್ಲಿ ಕುಳಿತು ಊಟ ಮಾಡುವಂತಹ ದಾಸೋಹ ಭವನ ನಿರ್ಮಿಸಲಾಗುವುದು. ದಾಸೋಹ ಭವನದ ಮುಂಭಾಗವು ಹೊಯ್ಸಳ ಶೈಲಿಯಿಂದ ಕೂಡಿರಲಿದೆ ಎಂದು ತಿಳಿಸಿದರು.
ರಥೋತ್ಸವ ಸಂದರ್ಭದಲ್ಲಿ ಭಕ್ತಾದಿಗಳಿಗೆ ಅನುಕೂಲಕ್ಕಾಗಿ ರಥಬೀದಿ ನಿರ್ಮಿಸಲಾಗುವುದು. ದೇವಾಲಯದ ಸುತ್ತಲೂ ಕಾಂಕ್ರಿಟ್ ರಸ್ತೆ, ಶೌಚಾಲಯ ವ್ಯವಸ್ಥೆ, ₹1.5 ಕೋಟಿ ವೆಚ್ಚದಲ್ಲಿ ಅಥಿತಿ ಗೃಹ ನಿರ್ಮಿಸಲಾಗುವುದು. ಕ್ಷೇತ್ರಕ್ಕೆ ಬರುವ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಇಂದು ನಡೆದ ಸಭೆಯಲ್ಲಿ ₹29 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಮುಜರಾಯಿ ಇಲಾಖೆ ಆಯುಕ್ತ ಶರತ್, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಘಾಟಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ದಿನೇಶ್, ಮುಜಾರಾಯಿ ತಹಶೀಲ್ದಾರ್ ಹೇಮಾವತಿ, ಉಪಕಾರ್ಯದರ್ಶಿ ರಘು, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಪ್ರಾಧಿಕಾರದ ಸದಸ್ಯರಾದ ಎನ್.ರಂಗಪ್ಪ, ಆರ್.ಮಹೇಶ್, ಹೇಮಲತಾರಮೇಶ್, ಲಕ್ಷ್ಮನಾಯ್ಕ್, ಪ್ರಧಾನ ಅರ್ಚಕ ಶ್ರೀನಿಧಿ, ತೂಬಗೆರೆ ಹೋಬಳಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರವಿಸಿದ್ದಪ್ಪ, ಯುವ ಮುಖಂಡ ಜಿ.ಶ್ರೀಧರ್ ಇದ್ದರು.
ಕ್ಷೇತ್ರದ ಅಭಿವೃದ್ಧಿಗೆ ಬೇಕು 100 ಎಕರೆ: ಘಾಟಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲಾಗಿದೆ. ಕ್ಷೇತ್ರ ಅಭಿವೃದ್ಧಿಗೆ 100 ಎಕರೆ ಜಾಗದ ಅವಶ್ಯಕತೆ ಇದೆ. ಸದ್ಯಕ್ಕೆ 50 ಎಕರೆ ಜಾಗ ಬೇಕಾಗಿದ್ದು, 20 ಎಕರೆ ಸರ್ಕಾರಿ ಜಮೀನು ಇದೆ. ಇನ್ನು 30 ಎಕರೆ ಜಾಗ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಗೌರಿಬಿದನೂರು ರಸ್ತೆಯ ಮಾಕಳಿಯಿಂದ ಹಾಗೂ ಕಂಟನಕುಂಟೆ ಮಾರ್ಗವಾಗಿ ಘಾಟಿಯವರೆಗೆ ರಸ್ತೆ ಅಭಿವೃದ್ಧಿ, ಅತಿಥಿ ಗೃಹ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಭಕ್ತಾದಿಗಳ ಹಿತ ದೃಷ್ಟಿಯಿಂದ ಸುಂಕ ರಹಿತ ಜಾತ್ರೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ನೇರ ದರ್ಶನ: ಸುಂಕ ರಹಿತ ಜಾತ್ರೆ
ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಬರುವಂತಹ ಭಕ್ತಾದಿಗಳ ವಾಹನಗಳಿಗೆ ಪ್ರವೇಶ ಶುಲ್ಕ ಪಡೆಯುವುದಿಲ್ಲ. ಹಿರಿಯ ನಾಗರಿಕರಿಗೆ ಅಂಗವಿಕಲರಿಗೆ ಗರ್ಭಿಣಿಯರು ಬಾಣಂತಿಯರು ದೇವರ ದರ್ಶನಕ್ಕೆ ನೇರವಾಗಿ ಹೋಗಲು ಅವಕಾಶ ಕಲ್ಪಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಡಿ.10ರಿಂದ ದನಗಳ ಜಾತ್ರೆ ಬ್ರಹ್ಮರಥೋತ್ಸವಕ್ಕೂ ಮುನ್ನ ನಡೆಯುವ ಐತಿಹಾಸಿಕ ದನಗಳ ಜಾತ್ರೆಯು ಡಿ. 10 ರಿಂದ 18 ರವರೆಗೆ ನಡೆಯಲಿದೆ. ರಾಸುಗಳ ಜಾತ್ರೆ ಸಮಯದಲ್ಲಿ ವಿಶೇಷ ದೀಪಾಲಂಕಾರ ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುವುದು. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
25ಕ್ಕೆ ಬ್ರಹ್ಮರಥೋತ್ಸವ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಡಿ.25 ರಂದು ನಡೆಯಲಿದೆ. ಈ ಬಾರಿ ವಿಶೇಷವಾಗಿ ಪುಷ್ಪಲಂಕಾರ ದೀಪ ಅಲಂಕಾರಗಳು ಇರಲಿವೆ. ಭಕ್ತಾದಿಗಳ ಅನುಕೂಲಕ್ಕೆ ಕುಡಿಯುವ ನೀರಿನ ವ್ಯವಸ್ಥೆ ದೇವರ ದರ್ಶನಕ್ಕೆ ಸಾಲಿನಲ್ಲಿ ಸಾಗುವ ವ್ಯವಸ್ಥೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಶುದ್ಧ ತುಪ್ಪದಿಂದ ತಯಾರಿಸಿದ ಲಡ್ಡನ್ನು ಭಕ್ತರಿಗೆ ಪ್ರಸಾದವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.ರಾಮಲಿಂಗಾರೆಡ್ಡಿ, ಸಚಿವ, ಮುಜರಾಯಿ ಇಲಾಖೆ
ಪ್ರಾಧಿಕಾರ ರಚನೆಯಾದ ನಂತರ ಕ್ಷೇತ್ರದ ಅಭಿವೃದ್ಧಿ ವೇಗ ದೊರೆತಿದೆ. ರಥೋತ್ಸವಕ್ಕೆ ಲಕ್ಷಾಂತರ ಜನ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಅಗತ್ಯ ಸೌಲಭ್ಯ ಕಲ್ಪಿಸಲು ಸಿದ್ಧತೆ ಆರಂಭಿಸಲಾಗಿದೆ.ಎನ್.ರಂಗಪ್ಪ, ಸದಸ್ಯ, ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
ರಥೋತ್ಸವ ಹಾಗೂ ದನಗಳ ಜಾತ್ರೆ ಸಂದರ್ಭದಲ್ಲಿ ಕ್ಷೇತ್ರಕ್ಕೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿಯಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸುವಂತೆ ಸಚಿವರಲ್ಲಿ ಮನವಿ ಮಾಡಲಾಗಿದೆ.ಆರ್.ಮಹೇಶ್, ಸದಸ್ಯ, ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.