ADVERTISEMENT

ದೊಡ್ಡಬಳ್ಳಾಪುರದಲ್ಲಿ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2023, 5:22 IST
Last Updated 1 ಫೆಬ್ರುವರಿ 2023, 5:22 IST
ದೊಡ್ಡಬಳ್ಳಾಪುರದ ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಉದ್ಘಾಟನೆ ಅಂಗವಾಗಿ ಕ್ರೀಡಾ ಜ್ಯೋತಿಯನ್ನು ಜಿಲ್ಲಾಧಿಕಾರಿ ಆರ್‌. ಲತಾ, ಶಾಸಕ ಟಿ.ವೆಂಕಟರಮಣಯ್ಯ ಸ್ವೀಕರಿಸಿದರು
ದೊಡ್ಡಬಳ್ಳಾಪುರದ ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಉದ್ಘಾಟನೆ ಅಂಗವಾಗಿ ಕ್ರೀಡಾ ಜ್ಯೋತಿಯನ್ನು ಜಿಲ್ಲಾಧಿಕಾರಿ ಆರ್‌. ಲತಾ, ಶಾಸಕ ಟಿ.ವೆಂಕಟರಮಣಯ್ಯ ಸ್ವೀಕರಿಸಿದರು   

ದೊಡ್ಡಬಳ್ಳಾಪುರ: ‘ಸರ್ಕಾರಿ ಸೇವೆಯಲ್ಲಿ ಕಾರ್ಯ ನಿರ್ವಹಿಸುವಾಗ ಸಮಸ್ಯೆಗಳು ಎದುರಾಗುವುದು ಸಾಮಾನ್ಯ. ಅಕಾರಿಗಳು, ಸಿಬ್ಬಂದಿ ಎದೆಗುಂದದೆ ಧೈರ್ಯವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಲತಾ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಇವರ ಸಹಯೋಗದೊಂದಿಗೆ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ-2023 ಉದ್ಘಾಟಿಸಿ ಮಾತನಾಡಿದರು.

‘ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ. ಸರ್ಕಾರಿ ನೌಕರರು ಹೆಚ್ಚು ಪ್ರಾಮಾಣಿಕತೆ, ಬದ್ಧತೆ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕು. ಸಿಬ್ಬಂದಿಗೆ ಏನೇ ಸಮಸ್ಯೆಗಳು ಎದುರಾದರೂ, ಅವುಗಳನ್ನು ಮುಕ್ತವಾಗಿ ಹಂಚಿಕೊಳ್ಳಬೇಕು. ಇದರಿಂದ ಆ ಸಮಸ್ಯೆಗಳಿಂದ ಹೊರಬರಲು ಸಹಕಾರಿಯಾಗಲಿದೆ ಎಂದರು.

ADVERTISEMENT

ಸರ್ಕಾರಿ ನೌಕರರು ತಾಲ್ಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಕ್ರೀಡಾ ವಿಭಾಗದಲ್ಲಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಆಶಿಸಿದರು.

ಶಾಸಕ ಟಿ. ವೆಂಕಟರಮಣಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಲ್ಕು ತಾಲ್ಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೆ, ಗೆದ್ದವರು ಬೀಗದೆ ಇರುವುದೇ ಮುಖ್ಯ ಎಂದರು.

ಕ್ರೀಡಾಕೂಟದ ಅಂಗವಾಗಿ ಕಾರ್ಯಕ್ರಮದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾ ಜ್ಯೋತಿ ಸ್ವೀಕರಿಸಲಾಯಿತು ಹಾಗೂ ತ್ರಿ-ವರ್ಣ ಬಣ್ಣದ ಬಲೂನ್‍ಗಳನ್ನು ಹಾರಿಸಲಾಯಿತು.

ತಹಶೀಲ್ದಾರ್ ಮೋಹನಕುಮಾರಿ, ಯುವ ಸಬಲೀಕರಣ ಮತ್ತು
ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್. ಬಾಲಕೃಷ್ಣ,
ಪ್ರಧಾನ ಕಾರ್ಯದರ್ಶಿ ಪಿ. ಗಂಗಾಧರಪ್ಪ, ಉಪಾಧ್ಯಕ್ಷ ಎಂ.ಎಸ್‌. ರಾಜಶೇಖರ್, ತಾಲ್ಲೂಕು ಘಟಕದ ಅಧ್ಯಕ್ಷ ಎನ್. ಲಕ್ಷ್ಮಿನರಸಿಂಹಯ್ಯ, ಕಾರ್ಯದರ್ಶಿ ಶ್ರೀನಿವಾಸ್ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದಾಕಾರಿಗಳು, ನಾಲ್ಕು ತಾಲ್ಲೂಕುಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.