
ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಗಮನ ದ್ವಾರದ ಸಮೀಪ ಭದ್ರತೆಗೆ ನಿಯೋಜನೆಯಾಗಿರುವ ಸಿಬ್ಬಂದಿ
ದೇವನಹಳ್ಳಿ: ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿದ ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡು ಟರ್ಮಿನಲ್ನಲ್ಲೂ ಹದ್ದಿನ ಕಣ್ಣು ಇಡಲಾಗಿದೆ.
ಕೇಂದ್ರ ಕೈಗಾರಿಕ ಭದ್ರತೆ ಪಡೆಯೂ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ರಾಜ್ಯ ಪೊಲೀಸರು ವಿಮಾನ ನಿಲ್ದಾಣದ ಸುತ್ತ ಮುತ್ತ ಅಹಿತ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಿದ್ದಾರೆ. ಪ್ರತಿ ಅರ್ಧ ಗಂಟೆಗೊಮ್ಮೆ ಶ್ವಾನ ದಳ ಮೂಲಕ ಎಲ್ಲೆಡೆ ತಪಾಸಣೆ ಮಾಡಲಾಗುತ್ತಿದೆ.
ಟರ್ಮಿನಲ್ಗಳಲ್ಲಿ ಅನಾಮದೇಯ ವಸ್ತುಗಳು ಕಂಡು ಬಂದರೇ ಕೂಡಲೇ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ ಮಾಡಲಾಗುತ್ತಿದೆ. ಪ್ರಯಾಣಿಕರನ್ನು ಬಿಟ್ಟು ಹೋಗಲು ಬರುವ ಹಿತೈಶಿಗಳ ಸಂಖ್ಯೆಯೂ ಹೆಚ್ಚಾಗಿ ಕಂಡು ಬಂದರೇ ಅವರನ್ನು ಹೆಚ್ಚು ಸಮಯ ಟರ್ಮಿನಲ್ಗಳಲ್ಲಿ ನಿಲ್ಲದಂತೆ ಭದ್ರತಾ ಸಿಬ್ಬಂದಿ ಎಚ್ಚರಿಕೆ ನೀಡುತ್ತಿದ್ದಾರೆ.
ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತವಾಗಿ ಪರಿಶೀಲನೆ ನಿಗಾವಹಿಸಲು ಕಂಟ್ರೋಲ್ ರೂಂಗಳಲ್ಲಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಟರ್ಮಿನಲ್ನಲ್ಲಿರುವ ಚೆಕ್ ಪೋಸ್ಟ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.
ಟ್ಯಾಕ್ಸಿಗಳ ಮೂಲಕ ಹಾಗೂ ಖಾಸಗಿ ವಾಹನಗಳ ನಿಲುಗಡೆ ಸ್ಥಳದಲ್ಲಿ ಐದು ನಿಮಿಷಕ್ಕೂ ಹೆಚ್ಚಿನ ಕಾಲ ಕ್ಯಾಬ್ಗಳು ನಿಲ್ಲದಂತೆ ಭದ್ರತಾ ಸಿಬ್ಬಂದಿ ಸೂಚಿಸುತ್ತಿದ್ದಾರೆ. ಬಸ್ ನಿಲ್ದಾಣಗಳಲ್ಲಿ ಶಸ್ತ್ರ ಸಜ್ಜಿತ ಸಿಐಎಸ್ಎಫ್ ಸಿಬ್ಬಂದಿಯನ್ನು 24 ಗಂಟೆಯೂ ನಿಯೋಜಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.