ದೇವನಹಳ್ಳಿ: ದೇವನಹಳ್ಳಿ ತಾಲ್ಲೂಕು ಚಪ್ಪರದಕಲ್ಲು ಬಳಿಯ ಜಿಲ್ಲಾಡಳಿತ ಸಂಕೀರ್ಣ ಕಟ್ಟಡಕ್ಕೆ ಉಪವಿಭಾಗ ಕೇಂದ್ರ ಕಚೇರಿಗೆ ಸ್ಥಳಾಂತರ ಆಗಬೇಕು ಎಂದು ಪ್ರಜಾ ವಿಮೋಚಾ ಬಹುಜನ ಸಮಿತಿ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಬಿಜ್ಜವಾರ ನಾಗರಾಜ್ ಒತ್ತಾಯಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಮಿತಿ ನೂತನ ಪದಾಧಿಕಾರಿಗಳ ನೇಮಕ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಬೆಂಗಳೂರು ನಗರದಲ್ಲಿದ್ದ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳು ದೇವನಹಳ್ಳಿಗೆ ಬರಬೇಕು ಎಂದು ವಿವಿಧ ಸಂಘಟನೆಗಳು ಸತತ ಹೋರಾಟ ಮಾಡಿದ್ದವು ಎಂದು ಹೇಳಿದರು.
ಮೊದಲ ಹಂತವಾಗಿ ನೆಲಮಂಗಲ, ದೊಡ್ಡಬಳ್ಳಾಪುರ ತಾಲ್ಲೂಕಿಗೆ ಒಂದು ಉಪ ವಿಭಾಗ ಕೇಂದ್ರ ಮತ್ತು ದೇವನಹಳ್ಳಿ ಹೊಸಕೋಟೆ ಸೇರಿ ಒಂದು ಉಪವಿಭಾಗ ಕೇಂದ್ರವನ್ನು ದೇವನಹಳ್ಳಿ ತಾಲ್ಲೂಕಿನಲ್ಲಿ ಆರಂಭಿಸಲಾಗುವುದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಎರಡನೇ ಹಂತವಾಗಿ ಜಿಲ್ಲಾ ಕೇಂದ್ರವನ್ನು ದೇವನಹಳ್ಳಿಯಲ್ಲಿಯೇ ಆರಂಭಿಸಲಾಗುವುದು ಎಂದು ಭರವಸೆ ನೀಡಿತ್ತು.ಹೊಸಕೋಟೆ ಗಡಿ ಭಾಗದಿಂದ ದೊಡ್ಡಬಳ್ಳಾಪುರ ತಾಲ್ಲೂಕು ಕೇಂದ್ರಕ್ಕೆ ತಾಸುಗಟ್ಟಲೆ ಪ್ರಯಾಣ ಮಾಡಬೇಕು ಎಂದು ದೂರಿದರು.
ಸರ್ಕಾರ ದೇವನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೊಷಣೆ ಮಾಡಿದೆ. ಬರದ ತೀವ್ರತೆ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಿಲ್ಲ. ಜಿಲ್ಲಾಧಿಕಾರಿಗಳು ಮತ್ತು ತಾಲ್ಲೂಕು ದಂಡಾಧಿಕಾರಿಗಳು ಕೊಡಲೇ ಎಚ್ಚೇತ್ತು ಬೆಳೆ ನಷ್ಟದ ಸಮಗ್ರ ಮಾಹಿತಿಯನ್ನು ಸರ್ಕಾರ ನೀಡಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.
ದೇವನಹಳ್ಳಿ ತಾಲ್ಲೂಕು ಕಸಬಾ ಹೋಬಳಿ ಗೊಬ್ಬರ ಗುಂಟೆ ಗ್ರಾಮದ ವ್ಯಾಪ್ತಿಯಲ್ಲಿ 19.09 ಎಕರೆ ಸರ್ಕಾರಿ ಭೂಮಿಗೆ ಅಕ್ರಮ ದಾಖಲೆ ಸೃಷ್ಟಿ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ತನಿಖೆ ಯಾವ ಹಂತದಲ್ಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ಹೇಳಿದರು.
ಸಮಿತಿ ರಾಜ್ಯ ಘಟಕ ಉಪಾಧ್ಯಕ್ಷ ಸಿಂಗ್ರಹಳ್ಳಿ ನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ಚೆನ್ನಿಗರಾಯಪ್ಪ, ಸಂಘಟನಾ ಕಾರ್ಯದರ್ಶಿ ಮುನಿರಾಜು, ವಿಭಾಗೀಯ ಘಟಕ ಗೌರವಾಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಘಟಕ ಉಪಾಧ್ಯಕ್ಷ ಶಿವಾನಂದ, ಸಂಘಟನಾ ಕಾರ್ಯದರ್ಶಿಗಳಾದ ಸುರೇಶ್, ನಿಲೇರಿ ನಾಗರಾಜು, ಮಹಿಳಾ ಘಟಕ ತಾಲ್ಲೂಕು ಅಧ್ಯಕ್ಷೆ ಟಿ.ಅನುಪಮ, ಪ್ರಧಾನ ಕಾರ್ಯದರ್ಶಿ ಯಶೋಧ, ದೊಡ್ಡಬಳ್ಳಾಪುರ ತಾಲ್ಲೂಕು ಘಟಕ ಅಧ್ಯಕ್ಷ ನಂಜೇಗೌಡ, ಉಪಾಧ್ಯಕ್ಷ ಪುರುಷೋತ್ತಮ್, ನಗರ ಘಟಕ ಅಧ್ಯಕ್ಷ ಮುನಿಆಂಜಿನಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.