ದೇವನಹಳ್ಳಿ: ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಚಿಂತನೆ ಕುರಿತು ಮೇ 4 ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯಾಗಾರ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು.
ವಿವಿಧ ದಲಿತ ಸಂಘಟನೆ ಪದಾಧಿಕಾರಿಗಳೊಂದಿಗೆ ತಮ್ಮ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ವಿಶ್ವಮಾನ್ಯ ಪ್ರಜಾಪ್ರಭುತ್ವದಡಿಯ ಸಂವಿಧಾನ ಈ ದೇಶಕ್ಕೆ ಅಂಬೇಡ್ಕರ್ ಅವರು ನೀಡಿದ್ದಾರೆ. ಅವರನ್ನು ವಿಶ್ವಮಟ್ಟದಲ್ಲಿ ಮಹಾಜ್ಞಾನಿ ಎಂದು ಈಗಾಗಲೇ ಗುರುತಿಸಲಾಗಿದೆ. ಅವರು ಬರೆದ ಪುಸ್ತಕಗಳು, ಮಹಾ ಪ್ರಬಂಧಗಳು, ಎಲ್ಲರೂ ಓದಲು ಸಾಧ್ಯವಿಲ್ಲ. ಅವರು ದಲಿತ ಸಮುದಾಯದ ಕುಟುಂಬದಲ್ಲಿ ಹುಟ್ಟಿ ಕಠಿಣ ಪರಿಸ್ಥಿತಿಯಲ್ಲಿ ವ್ಯಾಸಂಗ ಮಾಡಿ ಅನೇಕ ಪದವಿಗಳನ್ನು ಪಡೆದು ಅಪಾರ ಜ್ಞಾನ ಸಂಪತ್ತು ಸಂಪಾದಿಸಿದ್ದರು. ವಿಶ್ವಮಾನ್ಯ ಪ್ರಜಾಪ್ರಭುತ್ವದಡಿಯ ಸಂವಿಧಾನ ಈ ದೇಶಕ್ಕೆ ನೀಡಿದ್ದಾರೆ ಎಂದು ಹೇಳಿದರು.
ಅವರ ಸಾಧನೆಗಳು, ವ್ಯಕ್ತಿತ್ವ, ಜೀವನ, ದೂರದೃಷ್ಟಿ ಚಿಂತನೆಗಳನ್ನು ಆಳವಾಗಿ ಅಧ್ಯಯನ ಮಾಡಿರುವ ಇಬ್ಬರು ತಜ್ಞರನ್ನು ಕಾರ್ಯಾಗಾರಕ್ಕೆ ಆಹ್ವಾನಿಸಿ ಉಪನ್ಯಾಸ ನೀಡಬೇಕು. ಪ್ರಗತಿಪರ ದಲಿತ ಮುಖಂಡರು ಕಾರ್ಯಾಗಾರದಲ್ಲಿ ಭಾಗವಹಿಸಿ ಎಂದು ಹೇಳಿದರು.
ಮಾದಿಗ ದಂಡೋರ ರಾಜ್ಯ ಘಟಕ ಉಪಾಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್, ಜಿಲ್ಲಾ ಘಟಕ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಕೆ. ವೆಂಕಟೇಶಪ್ಪ, ದಲಿತ ಸಂಘರ್ಷ ಸಮಿತಿ ತಾಲ್ಲೂಕು ಪ್ರಧಾನ ಸಂಚಾಲಕ ಅತ್ತಿಬೆಲೆ ನರಸಪ್ಪ, ಮಾದಿಗ ದಂಡೋರ ತಾಲ್ಲೂಕು ಘಟಕ ಅಧ್ಯಕ್ಷ ಮಾರಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.